ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ದಲಿತ ಯುವಕನಿಗೆ ಪೊಲೀಸ್ ಠಾಣೆಯಲ್ಲಿ ಮೂತ್ರ ಕುಡಿಸಿದ ಆರೋಪ ಎದುರಿಸುತ್ತಿರುವ ಪಿ ಎಸ್ ಐ ಅರ್ಜುನ್ ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಚಿಕ್ಕಮಗಳೂರು ಒಂದನೇ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಪುಷ್ಪಾಂಜಲಿ ಅವರು ಆದೇಶಿಸಿದ್ದಾರೆ.
ಗೋಣಿಬೀಡು ಠಾಣೆಯಲ್ಲಿ ದಲಿತ ಯುವಕನಿಗೆ ಮೂತ್ರ ಕುಡಿಸುವ ಮೂಲಕ ಅಮಾನುಷವಾಗಿ ನಡೆದುಕೊಂಡ ಘಟನೆಗೆ ರಾಜ್ಯವ್ಯಾಪಿ ಆಕ್ರೋಶಗಳು ಬರುತ್ತಿದ್ದಂತೆ ರಾಜ್ಯ ಸರ್ಕಾರವು ಈ ಪ್ರಕರಣವನ್ನು ಸಿಐಡಿಗೆ ವಹಿಸಿತ್ತು. ನಿನ್ನೆ ಬೆಂಗಳೂರಿನಲ್ಲಿ ಅರ್ಜುನ್ ನನ್ನು ವಿಚಾರಣೆಗೆ ಒಳಪಡಿಸಿದ್ದ ಸಿಐಡಿ ನಂತರ ವಶಕ್ಕೆ ಪಡೆದಿದ್ದರು.
ಈ ಹಿನ್ನಲೆಯಲ್ಲಿ ಇಂದು ಆರೋಪಿ ಅರ್ಜುನ್ ನನ್ನು ಚಿಕ್ಕಮಗಳೂರು ಒಂದನೇ ಜಿಲ್ಲಾ ಸತ್ರ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿತ್ತು. ವಾದ ವಿವಾದಗಳನ್ನು ಆಲಿಸಿದ ನ್ಯಾಯಾಧೀಶರು ಆರೋಪಿ ಅರ್ಜುನ್ ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಈ ಹಿಂದೆ ತಮ್ಮ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಪಿ ಎಸ್ ಐ ಅರ್ಜುನ್ ನಿರೀಕ್ಷಣಾ ಜಾಮೀನು ಕೋರಿ ಚಿಕ್ಕಮಗಳೂರು ಒಂದನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜುನ್ ಸಲ್ಲಿಸಿದ್ದರು. ಆ ಅರ್ಜಿಯನ್ನು ವಜಾಗೊಳಿಸಲಾಗಿತ್ತು.