ಬೆಂಗಳೂರು: ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರಿಗೆ ಕ್ವಾರಂಟೈನ್ ಅವಧಿಯನ್ನು 7 ದಿನಗಳಿಂದ 14 ದಿನಗಳಿಗೆ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಗೃಹಸಚಿವ ಬಸವರಾಜ್ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಏಳು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ವರಿಷ್ಠಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆ ನಡೆಸಲಾಯಿತು.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹಸಚಿವ ಬಸವರಾಜ್ ಬೊಮ್ಮಾಯಿ, ಈವರೆಗೂ ನೆರೆಯ ಮಹಾರಾಷ್ಟ್ರದಿಂದ ಬಂದವರಿಗೆ 7ದಿನಗಳ ಕ್ವಾರಂಟೈನ್ ಅವಧಿಯನ್ನು ನಿಗದಿಪಡಿಸಲಾಗಿತ್ತು. ಆದರೆ ಬಹುತೇಕ ಕೊರೊನಾ ಸೋಂಕಿನ ಪ್ರಕರಣಗಳು ಮಹಾರಾಷ್ಟ್ರದ ಸಂಪರ್ಕ ಇರುವ ಹಿನ್ನೆಲೆಯಲ್ಲಿ ಒಂದು ವಾರದಿಂದ 14 ದಿನಗಳ ಕಾಲ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದರು.
ಸಂಜೆ ವೇಳೆಗೆ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳಲಿದೆ. ಮಹಾರಾಷ್ಟ್ರದಿಂದ ಬಂದವರಿಗೆ 14 ದಿನ ಕ್ವಾರಂಟೈನ್ ಹಾಗೂ ಬೇರೆ ರಾಜ್ಯಗಳಿಂದ ಬಂದವರಿಗೆ ಒಂದು ವಾರ ಸಾಂಸ್ಥಿಕ ಕ್ವಾರಂಟೈನ್ ಇರಲಿದೆ ಎಂದು ಹೇಳಿದರು.
ಬೇರೆ ಬೇರೆ ರಾಜ್ಯಗಳಿಂದ ರಾಜ್ಯಕ್ಕೆ ಬರುತ್ತಿರುವವರ ಮೇಲೆ ನಿಗಾವಹಿಸಲಾಗಿದೆ. ಸರ್ಕಾರದ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲನೆ ಮಾಡಲೇಬೇಕು. ಅನಗತ್ಯವಾಗಿ ಗೊಂದಲ ಸೃಷ್ಟಿಸುವ ಕೆಲಸವನ್ನು ಮಾಡಬೇಡಿ ಎಂದು ಅವರು ಮನವಿ ಮಾಡಿದರು.