ಉಡುಪಿ: ಬಹುಕೋಟಿ ಉದ್ಯಮಿ ಭಾಸ್ಕರ ಶೆಟ್ಟಿ (52) ಅವರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತ್ನಿ, ಪುತ್ರ ಹಾಗೂ ಗೆಳೆಯ ನಂದಳಿಕೆಯ ಜ್ಯೋತಿಷಿ ನಿರಂಜನ್ ಭಟ್ ಈ ಮೂವರಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ. ಈ ಹಿನ್ನೆಲೆ ಮಂಗಳವಾರ ರಾತ್ರಿ ರಾಜೇಶ್ವರಿ ಶೆಟ್ಟಿಯನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕಳುಹಿಸಲಾಗಿದೆ. ಈಗಾಗಲೇ ಪುತ್ರ ನವನೀತ್ ಶೆಟ್ಟಿ, ಗೆಳೆಯ ನಿರಂಜನ್ ಭಟ್ ಈಗಾಗಲೇ ಪರಪ್ಪನ ಅಗ್ರಹಾರದಲ್ಲಿದ್ದಾರೆ.
ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಸಹಿತ ಬಿಗು ಭದ್ರತೆಯಲ್ಲಿ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದು, ಪರಪ್ಪನ ಅಗ್ರಹಾರಕ್ಕೆ ಹಸ್ತಾಂತರಿಸಲಾಗಿದೆ. ಜಿಲ್ಲಾ ನ್ಯಾಯಾಲಯದ ತೀರ್ಪಿನ ಬಳಿಕ ರಾಜೇಶ್ವರಿ ಶೆಟ್ಟಿಯನ್ನು ಕರೆದು ಕೊಂಡು ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ರ್ಯಾಪಿಡ್ ಟೆಸ್ಟ್ ವರದಿ ನೆಗೆಟಿವ್ ಬಂದಿದ್ದು, ಆ ಬಳಿಕ ಮಣಿಪಾಲ ಪೊಲೀಸರು, ಮಹಿಳಾ ಠಾಣೆಯ ಎಸ್ ಐ, ಸಶಸ್ತ್ರ ಹೊಂದಿರುವ ಸಿಬಂದಿ ಜತೆ ಜಿಲ್ಲಾ ಸಶಸ್ತ್ರ ವಾಹನದಲ್ಲಿ ರಾಜೇಶ್ವರಿ ಶೆಟ್ಟಿಯನ್ನು ಕರೆದುಕೊಂಡು ಹೋಗಲಾಗಿದೆ.
ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಬೆಂಗಳೂರು ತಲುಪಿದ್ದು, ಜೈಲರ್ ಅವರಿಗೆ ಹಸ್ತಾಂತರಿಸಲಾಗಿದೆ. ಜೈಲಿನಲ್ಲಿರುವ ಪ್ರತ್ಯೇಕ ಸೆಲ್ ನಲ್ಲಿ 14 ದಿನಗಳ ಕ್ವಾರಂಟೈನ್ ಮುಗಿಸಿ ಶಿಕ್ಷೆಯಾಗಿರುವ ಸೆಲ್ ನಲ್ಲಿ ಹಾಕಲಾಗುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.