ಉಡುಪಿ; ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ(ಪೋಕ್ಸೊ) ತ್ವರಿತ ವಿಶೇಷ ನ್ಯಾಯಾಲಯವು ಆದೇಶ ನೀಡಿದೆ. ಬ್ರಹ್ಮಾವರ ತಾಲೂಕು ಬಾಳಕುದ್ರು ನಿವಾಸಿ ಅಶೋಕ್ ಎ. (32) ಶಿಕ್ಷೆಗೊಳಗಾದ ಆರೋಪಿ.
ಆರೋಪಿ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 15ರ ಹರೆಯದ ಬಾಲಕಿಯನ್ನು ಪರಿಚಯ ಮಾಡಿಕೊಂಡು ಶಾಲೆಗೆ ಹೋಗುವ ಸಮಯ ಆಕೆಯನ್ನು ತನ್ನ ಕಾರಿನಲ್ಲಿ ಬಲತ್ಕಾರವಾಗಿ ಇನ್ನೋರ್ವ ಆರೋಪಿಯ ಮನೆಗೆ ಕರೆದುಕೊಂಡು ಹೋಗಿದ್ದನು. ಅಲ್ಲಿ ಬಲತ್ಕಾರವಾಗಿ ಆಕೆಯೊಂದಿಗೆ ದೈಹಿಕ ಸಂಪರ್ಕ ಮಾಡಿ ನಂತರ ಆಕೆಯನ್ನು ವಾಪಾಸ್ಸು ಮನೆಗೆ ಬಿಟ್ಟಿದ್ದನು. ಇದೇ ವೇಳೆ ಈ ವಿಚಾರವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದನು.
ನೊಂದ ಬಾಲಕಿ ಬೇಸರದಲ್ಲಿರುವುದನ್ನು ಗಮನಿಸಿದ ಆಕೆಯ ಮನೆಯವರು ವಿಚಾರಿಸಿದಾಗ ಈ ಘಟನೆ ಬೆಳಕಿಗೆ ಬಂತು. ಈ ಬಗ್ಗೆ ಮನೆಯವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಅದರಂತೆ ತನಿಖೆ ನಡೆಸಿದ ಆಗಿನ ಡಿವೈಎಸ್ಪಿ ಜೈಶಂಕರ್ ಆರೋಪಿಯ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ, ಆರೋಪಿ ಈಗಾಗಲೇ ವಿವಾಹವಾಗಿದ್ದು ನೊಂದ ಬಾಲಕಿಗೆ ದೌರ್ಜನ್ಯ ಎಸಗಿರುವುದು ಬಾಲಕಿಯ ಸಾಕ್ಷ್ಯ ಮತ್ತು ಇತರ ಸಾಂಧರ್ಬಿಕ ಸಾಕ್ಷ್ಯಗಳಿಂದ ಸಾಬೀತಾಗಿದೆ ಎಂದು ಅಭಿಪ್ರಾಯ ಪಟ್ಟು ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಅಲ್ಲದೆ 23ಸಾವಿರ ರೂ. ದಂಡ ವಿಧಿಸಿದ್ದು, ದಂಡದ ಮೊತ್ತದಲ್ಲಿ 10ಸಾವಿರ ರೂ. ಸರಕಾರಕ್ಕೆ ಮತ್ತು 13 ಸಾವಿರ ರೂ. ನೊಂದ ಬಾಲಕಿಗೆ ಪರಿಹಾರವಾಗಿ ನೀಡಬೇಕು ಮತ್ತು ಸಂತ್ರಸ್ತೆಗೆ ಒಂದು ಲಕ್ಷ ರೂ. ಪರಿಹಾರ ನೀಡುವಂತೆ ಸರಕಾರಕ್ಕೆ ನಿರ್ದೇಶನ ನೀಡಿ ಆದೇಶಿಸಿದ್ದಾರೆ.
ಬಾಲಕಿಯ ದೈಹಿಕ ದೌರ್ಜನ್ಯಕ್ಕೆ ಸಹಕರಿಸಿದ ಎನ್ನಲಾದ ಆರೋಪಿಯನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ನ್ಯಾಯಾಲಯ ಬಿಡುಗಡೆಗೊಳಿಸಿದೆ. ಪ್ರಕರಣದಲ್ಲಿ ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ವಿಚಾರಣೆ ನಡೆಸಿದ್ದು, ಕುಂದಾಪುರದ ಸರಕಾರಿ ಅಭಿಯೋಜಕ ಹರೀಶ್ಚಂದ್ರ ವಾದ ಮಂಡಿಸಿದ್ದಾರೆ.