ಬೆಂಗಳೂರು: 46 ವಿವಿಧ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರು ಮತ್ತು 6 ಉಪಾಧ್ಯಕ್ಷರ ನೇಮಕಾತಿಯನ್ನು ರದ್ದುಪಡಿಸಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ.
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವಧಿಯಲ್ಲಿ ನೇಮಕಗೊಂಡಿದ್ದವರನ್ನು ಒಂದೂವರೆ ವರ್ಷಗಳ ಅವಧಿ ಪೂರ್ಣಗೊಳಿಸಿದ ಮಾನದಂಡದ ಅಡಿಯಲ್ಲಿ ವಾಪಸ್ ಪಡೆಯಲಾಗಿದೆ.
ಈ ಪೈಕಿ ಕರಾವಳಿಯ ಸುಮಾರು ಏಳು ಅಧ್ಯಕ್ಷರ ನೇಮಕಾತಿ ರದ್ದುಗೊಳಿಸಲಾಗಿದೆ.
ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ಮಣಿರಾಜ ಶೆಟ್ಟಿ, ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಅಧ್ಯಕ್ಷರಾಗಿದ್ದ ಸಂತೋಷ್ ರೈ ಬೋಳಿಯಾರ್, ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷರಾಗಿದ್ದ ಸವಿತ ವಿಶ್ವನಾಥ್ ಅಮರ ಶೆಟ್ಟಿ, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ನಿತೀನ್ ಕುಮಾರ್, ಕಿಯೋನಿಕ್ಸ್ ಅಧ್ಯಕ್ಷರಾಗಿದ್ದ ಹರಿಕೃಷ್ಣ ಬಂಟ್ವಾಳ್, ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ಬೇಳೂರು ರಾಘವೇಂದ್ರ ಶೆಟ್ಟಿ, ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ಕೆ. ರವೀಂದ್ರ ಶೆಟ್ಟಿ ಸೇರಿದಂತೆ ಹಲವರ ನೇಮಕಾತಿ ವಾಪಸ್ ಪಡೆಯಲಾಗಿದೆ.
ರದ್ದುಗೊಳಿಸಲ್ಪಟ್ಟ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳಿಗೆ ಎರಡು ಅಥವಾ ಮೂರು ದಿನಗಳಲ್ಲಿ ಹೊಸ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ನೇಮಕಾತಿ ಆಗುವ ನಿರೀಕ್ಷೆಯಿದೆ.