ಕುಂದಾಪುರ: ಕಾರ್ಕಳ ಮೂಲದ ವ್ಯಕ್ತಿಯೊಬ್ಬರನ್ನು ಕಾರಿನ ಸಹಿತ ಸಜೀವವಾಗಿ ಸುಟ್ಟು ಕೊಲೆಗೈದ ಪ್ರಕರಣವನ್ನು ಒಂದೇ ದಿನದಲ್ಲಿ ಭೇಧಿಸಿದ ಬೈಂದೂರು ಪೊಲೀಸರ ತಂಡಕ್ಕೆ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರಾದ ದೇವಜ್ಯೋತಿ ರೇ ಅವರು ಶ್ಲಾಘಿಸಿದ್ದು 50 ಸಾವಿರ ರೂಪಾಯಿ ಬಹುಮಾನ ಘೋಷಿಸಿದ್ದಾರೆ.
ಬೈಂದೂರು ಪೊಲೀಸ್ ಠಾಣೆಗೆ ಶುಕ್ರವಾರ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಭೇಟಿ ನೀಡಿ ಪ್ರಕರಣದ ಮಾಹಿತಿ ಪಡೆದುಕೊಂಡರು. ಪ್ರಕರಣವನ್ನು ಕ್ಷಿಪ್ರವಾಗಿ ಭೇಧಿಸಿದ ಬೈಂದೂರು ಪೊಲೀಸರ ತಂಡಕ್ಕೆ ರೂ.50,000 ಬಹುಮಾನವನ್ನು ಘೋಷಿಸಿದ್ದಾರೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಗೆ ಭೇಟಿ ನೀಡಿದ ವೇಳೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಎಸ್ಪಿ ಅವರು, ಚಿನ್ನಾಭರಣ ಕಳವು ಪ್ರಕರಣ ಹಾಗೂ ಕಾರಿನೊಂದಿಗೆ ವ್ಯಕ್ತಿಯೊನ್ನು ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಂಡವನ್ನು ರಚಿಸಿ ಕ್ಷಿಪ್ರವಾಗಿ ಪ್ರಕರಣ ಭೇದಿಸಲಾಗಿದೆ. ಕಾರಿನೊಂದಿಗೆ ವ್ಯಕ್ತಿಯನ್ನು ಸುಟ್ಟು ಕೊಲೆಗೈದ ಪ್ರಕರಣದ ಸಮಗ್ರ ತನಿಖೆ ಮುಂದುವರಿದಿದ್ದು, ಬಳಿಕ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.