ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ವೈದ್ಯಾಧಿಕಾರಿಗಳ ವರ್ಗಾವಣೆಯಾಗಿದೆ.
ಬೆಳ್ತಂಗಡಿ ತಾಲೂಕಿನ ಅಳದಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಡಾ. ಚೈತ್ರ ಎ.ಸಿ. ಅವರನ್ನು ಮಂಗಳೂರು ತಾಲೂಕಿನ ಕೂಳೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ.
ಬೈಂದೂರು ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಶಸ್ತ್ರ ಚಿಕಿತ್ಸಾ ತಜ್ಞ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅವರನ್ನು ಕುಂದಾಪುರ ತಾಲೂಕು ಆಸ್ಪತ್ರೆಯಲ್ಲಿ ಖಾಲಿ ಇರುವ ವಿಕಿರಣ ಶಾಸ್ತ್ರ ತಜ್ಞರ ಎದುರು ಹುದ್ದೆಗೆ ವರ್ಗಾಯಿಸಲಾಗಿದೆ.
ಬಂಟ್ವಾಳ ತಾಲೂಕಿನ ಮುಂಡ್ಕೂರು ಪುದು ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ವೈದ್ಯಾಧಿಕಾರಿ ಡಾ. ಸಿ. ಸುದರ್ಶನ್ ಅವರು ದಕ್ಷಿಣ ಕನ್ನಡ ಜಿಲ್ಲಾ ಕುಷ್ಠ ರೋಗ ನಿವಾರಣಾಧಿಕಾರಿ ಹುದ್ದೆಗೆ ವರ್ಗಾವಣೆಗೊಂಡಿದ್ದಾರೆ. ಪುತ್ತೂರು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಯಾಗಿದ್ದ ಡಾ. ಅಶೋಕ್ ಕುಮಾರ್ ರೈ ಅವರನ್ನು ಪುತ್ತೂರು ತಾಲೂಕು ಆರೋಗ್ಯಾಧಿಕಾರಿಯಾಗಿ ವರ್ಗಾಯಿಸಲಾಗಿದೆ.
ಉಡುಪಿ ಜಿಲ್ಲೆಯ ಅವರ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸವಿತಾ ಕುಂದರ್ ಅವರನ್ನು ಕರ್ಜೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಗೊಳಿಸಲಾಗಿದೆ. ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಎಂ.ಎಸ್. ಸಂದೀಪ್ ಅವರನ್ನು ಉಡುಪಿ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ತಜ್ಞರಾಗಿ ವರ್ಗಾವಣೆ ಮಾಡಲಾಗಿದೆ.
ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರದ ಅರವಳಿಕೆ ತಜ್ಞ ಡಾ. ರಾಜಗೋಪಾಲ್ ಭಂಡಾರಿ ಅವರನ್ನು ಉಡುಪಿ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಅರವಳಿಕೆ ತಜ್ಞೆ ಡಾ. ವಿ. ಶ್ವೇತಾ ಅವರನ್ನು ಪುತ್ತೂರು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿದೆ.
ಸಾರ್ವತ್ರಿಕ ವರ್ಗಾವಣೆ ಅಡಿಯಲ್ಲಿ ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ 97 ವಿವಿಧ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.