ಉಡುಪಿ: ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿ ಶೀಟರ್ ಒಬ್ಬನನ್ನು ಗಡಿಪಾರು ಮಾಡಿರುವ ಘಟನೆ ಗಂಗೊಳ್ಳಿಯಲ್ಲಿ ನಡೆದಿದೆ.
ಗಂಗೊಳ್ಳಿಯ ಜಾಮೀಯ ಮೊಹಲ್ಲಾ ಮೀನು ಮಾರುಕಟ್ಟೆ ಬಳಿಯ ನಿವಾಸಿ ಮುಹಮ್ಮದ್ ಸುಭಾನ್ (25) ಎಂಬಾತನನ್ನು ಆರು ತಿಂಗಳ ಕಾಲ ಗಡಿಪಾರು ಮಾಡಿ ಕುಂದಾಪುರ ಉಪವಿಭಾಗ ದಂಡಾಧಿಕಾರಿ ಅ.17 ರಂದು ಆದೇಶ ಹೊರಡಿಸಿದ್ದಾರೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಮಚ್ಚೀಂದ್ರ ಹಾಕೆ ತಿಳಿಸಿದ್ದಾರೆ.
ಈತ ತನ್ನದೇ ತಂಡ ಕಟ್ಟಿಕೊಂಡು ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ, ಜಾನುವಾರು ಕಳವು ಹಾಗೂ ಜಾನುವಾರು ಸಾಗಾಟ ಮತ್ತು ಹಿಂಸೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಈತ ಕಳೆದ ಐದು ವರ್ಷಗಳಿಂದ ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ತರುವ ರೀತಿಯಲ್ಲಿ ನಡೆದುಕೊಂಡು ಬರುತ್ತಿದ್ದಾನೆ. ಈತನ ವಿರುದ್ಧ ಹಲವು ಬಾರಿ ಕಾನೂನು ಕ್ರಮಗಳನ್ನು ಜರಗಿಸಲಾಗಿದೆ. ಹಲವು ಪ್ರಕರಣಗಳಲ್ಲಿ ಬಂಧನಕ್ಕೆ ಒಳಪಟ್ಟು ನ್ಯಾಯಾಂಗ ಬಂಧನದಲ್ಲಿದ್ದರೂ ಕೂಡ ಈತ ನಡವಳಿಕೆಯಲ್ಲಿ ಯಾವುದೇ ಬದಲಾವಣೆ ತಂದುಕೊಳ್ಳದೆ ಅಪರಾಧ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಬರುತ್ತಿದ್ದಾನೆ. ಈತನ ವಿರುದ್ಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಒಟ್ಟು ಐದು ಪ್ರಕರಣಗಳು ದಾಖಲಾಗಿವೆ ಎಂದು ಅವರು ತಿಳಿಸಿದ್ದಾರೆ.
ಈತ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಹೊರ ಬಂದ ನಂತರವೂ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ತಂದಿದ್ದಾನೆ. ಈ ಬಗ್ಗೆ ಮೇಲಾಧಿಕಾರಿಗಳ ಆದೇಶ ದಂತೆ ಗಂಗೊಳ್ಳಿ ಪೊಲೀಸ್ ಠಾಣಾ ಎಸ್ಸೈ ಕುಂದಾಪುರ ಉಪವಿಭಾಗ ದಂಡಾಧಿಕಾರಿಯವರಿಗೆ ವರದಿ ಸಲ್ಲಿಸಿದ್ದಾರೆ. ಉಪ ವಿಭಾಗ ದಂಡಾಧಿಕಾರಿ ಈ ವರದಿಯನ್ನು ಪರಿಶೀಲಿಸಿ ಸುಭಾನ್ನನ್ನು ಆರು ತಿಂಗಳ ಕಾಲ ಚಳ್ಳಕರೆ ಉಪವಿಭಾಗಕ್ಕೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.
ಅಲ್ಲದೆ ಆರು ತಿಂಗಳ ಒಳಗೆ ಸಂಬಂಧಪಟ್ಟ ಪ್ರಾಧಿಕಾರದ ಅನುಮತಿಯನ್ನು ಪಡೆಯದೆ ಈತ ಕುಂದಾಪುರ ಪೊಲೀಸ್ ಉಪವಿಭಾಗದಲ್ಲಿ ಯಾವುದೇ ಕಾರಣಕ್ಕೂ ಕಂಡು ಬಂದರೆ ಬಂಧಿಸುವಂತೆ ಗಂಗೊಳ್ಳಿ ಎಸ್ಸೈಯವರಿಗೆ ಆದೇಶ ನೀಡಲಾಗಿದೆ ಎಂದು ಎಸ್ಪಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.