ಸುಳ್ಯ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಭಾಗೀರಥಿ ಮುರುಳ್ಯ ಅವರನ್ನು ಆಯ್ಕೆ ಮಾಡಲಾಗಿದೆ.ಈ ಮೂಲಕ ಟಿಕೆಟ್ ನಿರೀಕ್ಷೆಯಲ್ಲಿದ್ದ ಸಚಿವ, ಶಾಸಕ ಎಸ್ ಅಂಗಾರ ಅವರಿಗೆ ನಿರಾಸೆಯಾಗಿದೆ.
ಇನ್ನು ಭಾಗೀರಥಿ ಮುರುಳ್ಯ ಅವರು ಸುಳ್ಯದ ಜನತೆಗೆ ಹೊಸ ಮುಖವೇನು ಅಲ್ಲ. ಇವರು ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಶಾಂತಿನಗರ ಮುರುಳ್ಯದ ದಿ.ಗುರುವ ಮತ್ತು ದಿ.ಕೊರಗ್ಗು ದಂಪತಿಯ ಪುತ್ರಿ. ಪಿಯುಸಿ ಓದಿರುವ ಇವರು, ಪ್ರಸ್ತುತ ಹೈನುಗಾರಿಕೆ, ಟೈಲರಿಂಗ್ ವೃತ್ತಿ ನಿರ್ವಹಿಸುತ್ತಿದ್ದಾರೆ.ಮೊದಲಿಗೆ ಬೀಡಿ ಕಾರ್ಮಿಕೆಯಾಗಿ, ಗೌರವ ಶಿಕ್ಷಕಿಯಾಗಿಯೂ ಕಲಸ ಮಾಡುತ್ತಿದ್ದರು.
ರಾಷ್ಟ್ರಸೇವಿಕಾ ಸಮಿತಿ ಪ್ರಾಥಮಿಕ ಶಿಕ್ಷಣ ಪಡೆದಿರುವ ಭಾಗೀರಥಿ ಅವರು ರಾಷ್ಟ್ರ ಸೇವಿಕ ಸಮಿತಿ ಸದಸ್ಯೆಯಾಗಿ, ಮತ್ತಿತರವಾಗಿ ತೊಡಗಿಸಿಕೊಂಡಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸಿ ಎಣ್ಮೂರು ತಾಲೂಕು ಪಂಚಾಯತ್ ಕ್ಷೇತ್ರದ ಸದಸ್ಯೆಯಾಗಿ, ಜಾಲ್ಸೂರು ಜಿಲ್ಲಾ ಪಂಚಾಯತ್ ಕ್ಷೇತ್ರದ ಸದಸ್ಯೆಯಾಗಿ ದುಡಿದಿದ್ದಾರೆ. ಸುಳ್ಯ ಬಿಜೆಪಿ ಮಂಡಲ ಸಮಿತಿ ಸದಸ್ಯೆಯಾಗಿ, ದ.ಕ.ಜಿಲ್ಲಾ ಬಿಜೆಪಿ ಕಾರ್ಯದರ್ಶಿಯಾಗಿ, ಬಿಜೆಪಿ ಪುತ್ತೂರು ಮಂಡಲ ಸಹಪ್ರಭಾರಿಯಾಗಿ, ರಾಜ್ಯ ಬಿಜೆಪಿ ಎಸ್.ಸಿ.ಮೋರ್ಚಾ ಉಪಾಧ್ಯಕ್ಷೆಯಾಗಿ ಉಡುಪಿ, ದ.ಕ. ಸಹಪ್ರಭಾರಿಯಾಗಿ, ದ.ಕ. ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆಯಾಗಿ, ಬೆಳ್ತಂಗಡಿ ಮಂಡಲ ಸಹಪ್ರಭಾರಿಯಾಗಿದ್ದಾರೆ.
ಪ್ರಸ್ತುತ ರಾಜ್ಯ ಬಿಜೆಪಿ ಮಹಿಳಾ ಮೋರ್ಚದ ಕಾರ್ಯಕಾರಿಣಿ ಸದಸ್ಯೆಯಾಗಿ, ಕೊಡಗು ಜಿಲ್ಲೆ ಮತ್ತು ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಪ್ರಭಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಿವಿಧ ಸಹಕಾರಿ ಸಂಘಗಳಲ್ಲಿ, ಧಾರ್ಮಿಕ ಕ್ಷೇತ್ರದಲ್ಲೂ, ಸಾಮಾಜಿಕ ಕ್ಷೇತ್ರದಲ್ಲೂ ತನ್ನನ್ನು ತೊಡಗಿಸಿಕೊಂಡಿದ್ದಾರೆ.