ಬೆಳ್ತಂಗಡಿ: ರಾಜ್ಯಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ವಿಜಯೋತ್ಸವದ ವೇಳೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಆರೋಪ ಸದನದಲ್ಲೂ ಗದ್ದಲಕ್ಕೆ ಕಾರಣವಾಗಿದ್ದು, ಐಪಿಸಿ ಸೆಕ್ಷನ್ 153 ಬಿ(ರಾಷ್ಟ್ರೀಯ ಸಮಗ್ರತೆ ಧಕ್ಕೆ ತರುವ ಹೇಳಿಕೆ) 505 (ಸಾರ್ವಜನಿಕ ಕೇಡಿಗೆ ಕಾರಣವಾಗುವ ಹೇಳಿಕೆ) ಆರೋಪದ ಅಡಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ತಂಡ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಿದ್ದು, ನಂತರದಲ್ಲಿ ಪಕ್ಷದ ಎದುರೇ ಪ್ರತಿಭಟನೆ ನಡೆಸಿದರು. ಇನ್ನು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಅವಕಾಶನ ನೀಡದ ಪೊಲೀಸರು ಪರಿಸ್ಥಿತಿಯನ್ನ ನಿಯಂತ್ರಿಸಿದರು.
ಈ ಸಂದರ್ಭದಲ್ಲಿ ವಿಧಾನಸಭೆ ವಿಪಕ್ಷ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಶಾಸಕರಾದ ಡಾ. ಭರತ್ ಶೆಟ್ಟಿ, ಹರೀಶ್ ಪೂಂಜ, ಜ್ಯೋತಿ ಗಣೇಶ್ ಅವರನ್ನೊಳಗೊಂಡ ಬಿಜೆಪಿ ನಿಯೋಗ ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಅಲ್ಲದೇ ಪಾಕ್ ಪರ ಘೋಷಣೆ ಕೂಗಿದವರನ್ನು ಕೂಡಲೇ ಬಂಧಿಸಬೇಕೆಂದು ಠಾಣೆ ಮುಂದೆಯೇ ಪ್ರತಿಭಟನೆ ನಡೆಸಿದರು. ಇದರೊಂದಿಗೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವಂತೆ ಮತ್ತು ಕಾಂಗ್ರೆಸ್ ಕಚೇರಿಗಳಿಗೆ ಮುತ್ತಿಗೆ ಹಾಕುವಂತೆ ಬಿಜೆಪಿ ನಾಯಕರು ಕರೆ ಕೊಟ್ಟಿದ್ದಾರೆ.
ಈ ಕುರಿತು ಮಾತನಾಡಿದ ಶಾಸಕ ಹರೀಶ್ ಪೂಂಜ, ‘ದೇಶ ವಿರೋಧಿ ಘೋಷಣೆ ಕೂಗಿರುವಂತಹ ನಾಸೀರ್ ಹುಸೇನ್ ಅಂತವರನ್ನು ರಾಜ್ಯ ಸಭೆಗೆ ಕಳುಹಿಸುತ್ತಿರುವುದು ನಾಚಿಕೆಗೇಡಿನ ವಿಚಾರವಾಗಿದೆ. ವಿಧಾನ ಸೌಧದ ಆವರಣದಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಸೇರಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದು ಸರಿಯಲ್ಲ. ಕಾಂಗ್ರೆಸ್ ಪಕ್ಷ ನಿಜವಾಗಲೂ ದೇಶ ಪ್ರೇಮಿಯಾಗಿದ್ದರೆ ನಾಸೀರ್ ಹುಸೇನ್ ಅವರನ್ನು ಬಂಧಿಸಬೇಕು ಅವರನ್ನು ಪಾರ್ಟಿಯಿಂದ ಸಸ್ಪೆಂಡ್ ಮಾಡಬೇಕು,’ ಎಂದು ಆಗ್ರಹಿಸಿದರು.
ಆರ್.ಅಶೋಕ್, “ವಿಧಾನಸೌಧದ ಮೇಲೆ ಇವರು ಪಾಕಿಸ್ತಾನ ಬಾವುಟ ಹಾರಿಸುವ ಸನ್ನಿವೇಶ ಸೃಷ್ಟಿಯಾಗುತ್ತಿದೆ. ಶಕ್ತಿಸೌಧದ ಒಳಗೆ ಈ ರೀತಿಯವರು ಎಷ್ಟು ಜನ ಅಡಗಿದ್ದಾರೋ?. ಮುಂಬೈ ತಾಜ್ ಹೋಟೆಲ್ನಲ್ಲಿ ಆದಂತಹ ಭಯ ನನಗೆ ಆಗುತ್ತಿದೆ. ಪೊಲೀಸರು ಕೈ ಕಟ್ಟಿ ನಿಂತುಕೊಂಡಿದ್ದಾರೆ. ಪಿಎಫ್ಐ ಸೇರಿದಂತೆ ದೇಶದ್ರೋಹಿಗಳ ವಿರುದ್ಧದ 1,200 ಪ್ರಕರಣಗಳನ್ನು ಈ ಸರ್ಕಾರ ವಾಪಸ್ ತೆಗೆದುಕೊಂಡಿದೆ. ಪೊಲೀಸರು ಪ್ರಶ್ನೆ ಮಾಡಿದರೆ ವರ್ಗಾವಣೆ ಮಾಡುತ್ತಾರೆ ಅಂತಾ ಭಯಗೊಂಡಿದ್ದಾರೆ”. ಎಂದು ತಿಳಿಸಿದರು.
ಪ್ರಹ್ಲಾದ್ ಜೋಶಿ ಹೇಳಿಕೆ: “ನಾಸೀರ್ ಹುಸೇನ್ ಅವರ ವಿಜಯೋತ್ಸವದ ವೇಳೆ ಬೆಂಬಲಿಗರು ವಿಧಾನಸೌಧದೊಳಗೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು ಅತ್ಯಂತ ಖಂಡನೀಯ. ಈ ಕೂಡಲೇ ಘೋಷಣೆ ಕೂಗಿದವರನ್ನು ಸರ್ಕಾರ ಬಂಧಿಸಬೇಕು” ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದರು.
ಬೊಮ್ಮಾಯಿ ಹೇಳಿಕೆ: ‘ನಾಸೀರ್ ಹುಸೇನ್ ಅವರ ಬೆಂಬಲಿಗರು ಪಾಕ್ ಪರ ಘೋಷಣೆ ಕೂಗಿದ್ದಾರೆ. ಈ ವಿಷಯ ಅತ್ಯಂತ ಗಂಭೀರವಾಗಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ತಪ್ಪಿಸ್ಥರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.