ಕೇರಳದ ವಯನಾಡಿನಲ್ಲಿ ಭಾರೀ ಭೂ ಕುಸಿತವಾಗಿದ್ದು 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ವೈತಿರಿ ತಾಲ್ಲೂಕಿನ ಮೆಪ್ಪಾಡಿ ಪಂಚಾಯತ್ನಲ್ಲಿ ಮಂಗಳವಾರ ಮುಂಜಾನೆ 3.49 ರ ಸುಮಾರಿಗೆ ಭೂಕುಸಿತ ಸಂಭವಿಸಿದೆ.
ಅಗ್ನಿಶಾಮಕ ಮತ್ತು ಪಾರುಗಾಣಿಕಾ, ನಾಗರಿಕ ರಕ್ಷಣೆ, ಎನ್ಡಿಆರ್ಎಫ್ ಮತ್ತು ಸ್ಥಳೀಯ ತುರ್ತು ಪ್ರತಿಕ್ರಿಯೆ ತಂಡಗಳ 250 ಸದಸ್ಯರು ವಯನಾಡ್ನ ಚುರಲ್ಮಾಲಾದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಎನ್ಡಿಆರ್ಎಫ್ನ ಹೆಚ್ಚುವರಿ ತಂಡಕ್ಕೆ ತಕ್ಷಣ ಸ್ಥಳಕ್ಕೆ ತಲುಪಲು ನಿರ್ದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮ್ಸ್ ವೈದ್ಯಕೀಯ ಕಾಲೇಜಿನ ಪ್ರಕಾರ, 48 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಇಲ್ಲಿಯವರೆಗೆ ನಾಲ್ಕು ಶವಗಳನ್ನು ಗುರುತಿಸಲಾಗಿದೆ ಎನ್ನಲಾಗಿದೆ.
ವಾಯುಪಡೆಯ ಎರಡು ಹೆಲಿಕಾಪ್ಟರ್ಗಳು, ಎಂಐ -17 ಮತ್ತು ಎಎಲ್ಎಚ್ ಸಹ ರಕ್ಷಣಾ ಕಾರ್ಯಾಚರಣೆಯನ್ನು ಸಂಯೋಜಿಸಲಿವೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ವಯನಾಡ್ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾಧ್ಯವಿರುವ ಎಲ್ಲ ರಕ್ಷಣಾ ಕಾರ್ಯಾಚರಣೆಗಳನ್ನು ಸಮನ್ವಯಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಇನ್ನು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ವಯನಾಡ್ ಭೂಕುಸಿತದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಜಿಲ್ಲಾ ಮಟ್ಟದ ನಿಯಂತ್ರಣ ಕೊಠಡಿಯನ್ನು ಮುಂಜಾನೆ ತೆರೆದಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ತುರ್ತು ಆರೋಗ್ಯ ಸೇವೆಗಳಿಗಾಗಿ 8086010833 ಮತ್ತು 9656938689 ಸಂಪರ್ಕಿಸಬಹುದು.ವೈಥಿರಿ, ಕಲ್ಪಟ್ಟಾ, ಮೆಪ್ಪಾಡಿ ಮತ್ತು ಮಾನಂದವಾಡಿ ಆಸ್ಪತ್ರೆಗಳು ಸೇರಿದಂತೆ ಎಲ್ಲಾ ಆಸ್ಪತ್ರೆಗಳು ಸಿದ್ಧವಾಗಿವೆ ಎಂದು ಅವರು ಹೇಳಿದ್ದಾರೆ.


