ಮಂಗಳೂರು: ಹೊಸದಿಲ್ಲಿಯ ಕೆಂಪುಕೋಟೆಯಲ್ಲಿ ಆಗಸ್ಟ್ 15 ರಂದು ನಡೆಯಲಿರುವ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ನಾಲ್ಕು ಪಿಎಂಶ್ರೀ ಶಾಲೆಗಳ ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ ನಾಲ್ವರು ಶಿಕ್ಷಕರು ವಿಶೇಷ ಅವಕಾಶ ಪಡೆದುಕೊಂಡಿದ್ದಾರೆ. ಇದರಲ್ಲಿ ಮೈಸೂರು ಶೈಕ್ಷಣಿಕ ವಿಭಾಗದಿಂದ ದ.ಕ. ಜಿಲ್ಲೆಯ ಓರ್ವ ವಿದ್ಯಾರ್ಥಿನಿ ಹಾಗೂ ಶಿಕ್ಷಕಿಯೊಬ್ಬರಿಗೆ ಭಾಗವಹಿಸಲು ವಿಶೇಷ ಆಮಂತ್ರಣ ದೊರಕಿದೆ.
ಹೊಸದಿಲ್ಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವಕ್ಕೆ ದ.ಕ. ಜಿಲ್ಲೆಯ ಮಂಗಳೂರಿನ ಶಕ್ತಿನಗರ ನಾಲ್ಯಪದವು ಕುವೆಂಪು ಶತಮಾನೋತ್ಸವ ಉನ್ನತೀಕರಿಸಿದ ಮಾದರಿ ಸ.ಹಿ.ಪ್ರಾ. ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಪೂರ್ವಿ ಯು. ಶೆಟ್ಟಿ ಹಾಗೂ ಶಿಕ್ಷಕಿ ಶ್ವೇತಾ ಕೆ. ಆಯ್ಕೆಯಾಗಿದ್ದಾರೆ. ಪೂರ್ವಿ ಯು. ಅವರು ಶಕ್ತಿನಗರದ ಕಾರ್ಮಿಕ ಕಾಲನಿ ನಿವಾಸಿ ಉಮೇಶ್ ಶೆಟ್ಟಿ, ಗೀತಾ ಶೆಟ್ಟಿ ದಂಪತಿಯ ಪುತ್ರಿ.
ಕಲಬುರಗಿ, ಬೆಂಗಳೂರು, ಬೆಳಗಾವಿ, ಮೈಸೂರು ಶೈಕ್ಷಣಿಕ ವಿಭಾಗದಿಂದ ಒಟ್ಟು 8 ಮಂದಿ ರಾಜ್ಯವನ್ನು ಪ್ರತಿನಿಧಿಸಿ ದಿಲ್ಲಿಯ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಇನ್ನು ಕರ್ನಾಟಕದ 6 ಪಂಚಾಯತ್ ಮಹಿಳಾ ಅಧ್ಯಕ್ಷರನ್ನು ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ವಿಶೇಷ ಅತಿಥಿಗಳಾಗಿ ಭಾಗವಹಿಸಲು ಆಹ್ವಾನಿಸಲಾಗಿದ್ದು, ದ.ಕ.ಜಿಲ್ಲೆಯ ಪೆರುವಾಯಿ ಗ್ರಾಮ ಪಂ. ಅಧ್ಯಕ್ಷೆ ನೆಫೀಸಾ ಅವರನ್ನು ಆಯ್ಕೆ ಮಾಡಲಾಗಿದೆ.
ಸುಮಾರು ಒಂದು ವರ್ಷದಿಂದ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ನೆಫೀಸಾ ಇವರು ಹಿಂದಿನ ಅವಧಿಯಲ್ಲಿ ಉಪಾಧ್ಯಕ್ಷರಾಗಿದ್ದರು. ಉಪಾಧ್ಯಕ್ಷರಾಗಿದ್ದಾಗ ಅವರು ವಾಹನ ಚಲಾಯಿಸಿ ತ್ಯಾಜ್ಯ ಸಂಗ್ರಹಿಸಿ ವಿಶೇಷವಾಗಿ ಗುರುತಿಸಲ್ಪಟ್ಟಿದ್ದರು. ಅವರ ಈ ಸೇವೆಯನ್ನು ಗುರುತಿಸಿ ವರ್ಲ್ಡ್ ಯೂತ್ ಸ್ಕಿಲ್ ಡೇ ಅಂಗವಾಗಿ ಬೆಂಗಳೂರಿನಲ್ಲಿ ಜರಗಿದ ಸಮಾರಂಭದಲ್ಲಿ ಮುಖ್ಯಮಂತ್ರಿ ಗೌರವಿಸಿದ್ದರು.