ಬೆಂಗಳೂರು: ಬೆಂಗಳೂರಿನಲ್ಲಿ ಕೊನೆಗೂ ಸರ್ಕಾರ ಲಾಕ್ ಡೌನ್ ಗೆ ಆದೇಶ ನೀಡಿದೆ. ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರದಲ್ಲಿ ಲಾಕ್ ಡೌನ್ ನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.
ಕೊರೊನಾ ನಿಯಂತ್ರಣಕ್ಕೆ ಬಾರದೇ ಇರೋ ಹಿನ್ನೆಲೆಯಲ್ಲಿ ಮಂಗಳವಾರ ಅಂದ್ರೆ ಜುಲೈ 14 ಮಂಗಳವಾರದಿಂದ ಜುಲೈ 23 ರವರೆಗೆ ಬೆಂಗಳೂರಿನಲ್ಲಿ 9 ದಿನಗಳ ಕಾಲ ರಾಜ್ಯ ಸರ್ಕಾರ ಲಾಕ್ ಡೌನ್ ನನ್ನು ಘೋಷಣೆ ಮಾಡಿದೆ. ಕೊನೆಗೂ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವನ್ನು ಸ್ಪಲ್ಪ ತಡವಾಗಿಯಾದರೂ ತೆಗೆದುಕೊಂಡಿದೆ.
ಇನ್ನು ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿರುವ ರಾಜ್ಯ ಸರ್ಕಾರ, ರಾಜ್ಯದಲ್ಲಿ ದಿನೇ ದಿನೇ ಭಾರಿ ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಮೇರೆಗೆ ದಿನಾಂಕ: 14.07.2020ರ ಮಂಗಳವಾರ ರಾತ್ರಿ 8.00 ಗಂಟೆಯಿಂದ 1 ವಾರಗಳ ಕಾಲ ಅಂದರೆ ದಿನಾಂಕ: 23.07.2020 ರ ಬೆಳಿಗ್ಗೆ 5.00 ಗಂಟೆಯವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲಾಗುವುದು.
ಈ ಅವಧಿಯಲ್ಲಿ ಎಂದಿನಂತೆ ಆಸ್ಪತ್ರೆಗಳು, ದಿನಸಿ, ಹಾಲು, ಹಣ್ಣು, ತರಕಾರಿ, ಔಷಧಿ, ಮೊದಲಾದ ದಿನಬಳಕೆಯ ಅಗತ್ಯ ವಸ್ತುಗಳು ಲಭ್ಯವಿರುತ್ತವೆ. ಇದರ ಜೊತೆ ಈಗಾಗಲೇ ನಿಗದಿಯಾಗಿರುವ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು ನಡೆಯಲಿವೆ ಎಂದಿದೆ.
ಹಾಗೇ, ದಿನಬಳಕೆ ವಸ್ತುಗಳ ಖರೀದಿಗೆ ತೆರಳುವಾಗ ಸಾಮಾಜಿಕ ಅಂತರ ಪಾಲಿಸಿ, ಮಾಸ್ಕ್ ಧರಿಸಿ, ಸರ್ಕಾರ ಹೊರಡಿಸುವ ಲಾಕ್ ಡೌನ್ ಸಂಬಂಧಿತ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸಿ ಸಹಕರಿಸಿ. ತಾವು ಲಾಕ್ಡೌನ್ ಸಂಧರ್ಬದಲ್ಲಿ ಮನೆಯಲ್ಲೇ ಇರುವ ಮೂಲಕ ಕೋವಿಡ್-19ರ ನಿಯಂತ್ರಣಕ್ಕೆ ಕೈ ಜೋಡಿಸಿ ಎಂದು ಪ್ರಕಟಣೆಯ ಮೂಲಕ ಜನರಲ್ಲಿ ಮನವಿ ಮಾಡಿಕೊಂಡಿದೆ.
ಕೋವಿಡ್-19 ಸೋಂಕು ಹರಡುವುದನ್ನು ನಿಯಂತ್ರಿಸಲು ಹಗಲಿರಳು ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ವೈದ್ಯಕೀಯ ಮತ್ತು ಪೋಲಿಸ್ ಸಿಬ್ಬಂದಿಗಳು ಹಾಗೂ ಎಲ್ಲಾ ಅಧಿಕಾರಿಗಳು, ಸ್ವಯಂ ಸೇವಕರು ಮನೆ ಮನೆಗೂ ಕೋವಿಡ್-19 ಕುರಿತು ಮಾಹಿತಿ ನೀಡುತ್ತಿರುವ ಪತ್ರಕರ್ತರು ಮತ್ತು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲರಿಗೂ ನಾನು ಇನ್ನೊಮ್ಮೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
.


