ಬೆಂಗಳೂರು: ನಟ ಚೇತನ್ ಕುಮಾರ್ ಹಿಜಾಬ್ ತೀರ್ಪು ನೀಡಿದ್ದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರೋಪದಡಿ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸುತ್ತಿದ್ದು, ಈ ಕುರಿತಂತೆ ಅವರು ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಅವರ ವಿರುದ್ಧ ಹೊರಡಿಸಲಾಗಿದ್ದ ಜಾಮೀನು ರಹಿತ ವಾರಂಟ್ ಅನ್ನು ಹೈಕೋರ್ಟ್ ಹಿಂಪಡೆದಿದೆ.
ಆಕ್ಷೇಪಾರ್ಹ ಟ್ವೀಟ್ ಮಾಡಿದ ನಟ ಚೇತನ್ ಕುಮಾರ್ ಅಹಿಂಸಾ ಹಾಗೂ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ತಮಿಳುನಾಡಿನ ತೌಹೀದ್ ಜಮಾತ್ ಅಧ್ಯಕ್ಷ ಆರ್. ರಹಮತುಲ್ಲಾ ವಿರುದ್ಧ ಸಾಮಾಜಿಕ ಕಾರ್ಯಕರ್ತ ಬೆಂಗಳೂರಿನ ಗಿರೀಶ್ ಭಾರದ್ವಾಜ್ ದಾಖಲಿಸಿರುವ ಕ್ರಿಮಿನಲ್ ನ್ಯಾಯಾಂಗ ನಿಂದನಾ ಅರ್ಜಿಯ ವಿಚಾರಣೆ ಯನ್ನು ನ್ಯಾಯಮೂರ್ತಿ ಕೆ ಸೋಮ ಶೇಖರ್ ಹಾಗೂ ನ್ಯಾ. ಕೆ. ರಾಜೇಶ್ ರೈ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಖುದ್ದು ಹಾಜರಿದ್ದ ಚೇತನ್ ಪರ ವಕೀಲ ಜೆ.ಡಿ.ಕಾಶಿನಾಥ್, ಅರ್ಜಿದಾರ ಚೇತನ್ ವಿರುದ್ಧ 2024ರ ಸೆಪ್ಟೆಂಬರ್ 14ರಂದು ನ್ಯಾಯಾಲಯ ಹೊರಡಿಸಿರುವ ಜಾಮೀನು ರಹಿತ ವಾರಂಟ್ ಹಿಂಪಡೆಯಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.
ನ್ಯಾಯ ಪೀಠ ಈ ಮನವಿಯನ್ನು ಪುರಸ್ಕರಿಸಿದ್ದು, ಜಾಮೀನು ರಹಿತ ಬಂಧನದ ವಾರಂಟ್ ಅನ್ನು ನ್ಯಾಯಪೀಠ ಹಿಂಪಡೆದಿದೆ. ಅಷ್ಟೇಅಲ್ಲದೆ ನಟ ಚೇತನ್ಗೆ 5 ಸಾವಿರ ರೂ. ದಂಡ ವಿಧಿಸಿ ಅದನ್ನು ಹೈಕೋರ್ಟ್ ಗ್ರಂಥಾಲಯಕ್ಕೆ ಪಾವತಿಸಬೇಕು ಎಂದು ನಿರ್ದೇಶನ ನೀಡಿತು.


