ಉಡುಪಿ ಜಿಲ್ಲೆಯ ಕಬ್ಬಿನಾಲೆ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೀತೆ ಬೈಲ್, ಕಬ್ಬಿನಾಲೆ ಅರಣ್ಯ ವ್ಯಾಪ್ತಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಜೊತೆಗೆ ನಕ್ಸಲ್ ನಿಗ್ರಹ ಪಡೆಯಿಂದ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ.
ಉಡುಪಿ ಜಿಲ್ಲೆಯ ಕಬ್ಬಿನಾಲೆ ಅರಣ್ಯ ವ್ಯಾಪ್ತಿಯಲ್ಲಿ ನಕ್ಸಲ್ ನಿಗ್ರಹ ಪಡೆ ನಡೆಸಿದಂತ ದಾಳಿಯಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಅವರನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿತ್ತು. ಇನ್ನೂ ಐದಾರು ನಕ್ಸಲರು ಅರಣ್ಯದಲ್ಲಿ ಇರುವುದಾಗಿ ಹೇಳಲಾಗುತ್ತಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವಂತ ಐಜಿಪಿ ರೂಪಾ.ಡಿ ಅವರು ನಕ್ಸಲ್ ನಾಯಕ ವಿಕ್ರಂ ಗೌಡ ಅವರನ್ನು ಹತ್ಯೆ ಮಾಡಲಾಗಿದೆ. ಅವರ ವಿರುದ್ಧ 61 ಕೇಸ್ ಗಳಿದ್ದವು ಎಂದಿದ್ದಾರೆ.ಕಾಡಿನಲ್ಲಿ ಇನ್ನೂ 5-6 ನಕ್ಸಲ್ ಇರುವುದಾಗಿ ಮಾಹಿತಿ ತಿಳಿದು ಬಂದಿದೆ. ಅವರಿಗೆ ಶರಣಾಗುವಂತೆ ಸೂಚಿಸಲಾಗಿದೆ. ಶರಣಾಗತಿಗೆ ಮೊದಲ ಆದ್ಯತೆ ನೀಡುತ್ತೇವೆ. ಇಲ್ಲದಿದ್ದರೇ ತಕ್ಕ ಪಾಠ ಕಲಿಸುವುದಾಗಿ ಎಚ್ಚರಿಸಿದ್ದಾರೆ.
ನಕ್ಸಲ್ ನಿಗ್ರಹ ಪಡೆಯಿಂದ ಕಾರ್ಯಾಚರಣೆ ಮುಂದುವರೆದಿದೆ. ಕಾರ್ಯಾಚರಣೆ ವೇಳೆ ಗುಂಡಿನ ಚಕಮಕಿ ನಡೆದಿತ್ತು. ಈ ಗುಂಡಿನ ಚಕಮಕಿಯಲ್ಲಿ ವಿಕ್ರಂ ಗೌಡ ಹತ್ಯೆ ಮಾಡಲಾಗಿದೆ ಎಂದರು.ಇನ್ನೂ ನಕ್ಸಲ್ ನಾಯಕ ವಿಕ್ರಂ ಗೌಡ ಎನ್ ಕೌಂಟರ್ ಬೆನ್ನಲ್ಲೇ ಪೀತಬೈಲ್, ಕಬ್ಬಿನಾಲೆ ಅರಣ್ಯ ವ್ಯಾಪ್ತಿಯ ಜನರಲ್ಲಿ ಆತಂಕ ಹೆಚ್ಚಾಗಿದೆ. ಅಲ್ಲದೇ ಗ್ರಾಮಸ್ಥರಿಗೆ ಎಚ್ಚರಿಕೆಯಿಂದ ಇರುವಂತೆ, ಸುರಕ್ಷಿತ ಸ್ಥಳಗಳಿಗೆ ತೆರಳುವಂತೆಯೂ ಪೊಲೀಸರು ಗ್ರಾಮಸ್ಥರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.


