ಉಡುಪಿ: ಫೆಬ್ರವರಿ ಮೊದಲ ವಾರದಲ್ಲಿ ನಗರದ ಅಜ್ಜರಕಾಡು ಡಾ| ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವಜನರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಬೃಹತ್ ಕೌಶಲ ರೋಜ್ಗಾರ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರಗಿದ ಜಿಲ್ಲಾ ಮಟ್ಟದ ಕೌಶಲ ರೋಜ್ಗಾರ್ ಮೇಳ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಬಗ್ಗೆ ಮಾತನಾಡಿ, “ಉದ್ಯೋಗ ಮೇಳದಲ್ಲಿ ರಾಜ್ಯ ಹಾಗೂ ಜಿಲ್ಲೆಯ ವಿವಿಧ ಪ್ರತಿಷ್ಠಿತ ಕಂಪೆನಿಗಳ 100ಕ್ಕೂ ಹೆಚ್ಚು ಉದ್ಯೋಗದಾತರು ಭಾಗವಹಿಸಲಿದ್ದು, ಯುವ ಜನರಿಗೆ ಉದ್ಯೋಗ ಒದಗಿಸುವ ಬೃಹತ್ ಉದ್ಯೋಗ ಇದಾಗಲಿದೆ. 3,500ಕ್ಕೂ ಹೆಚ್ಚು ಉದ್ಯೋಗ ಆಕಾಂಕ್ಷಿಗಳು ಆಗಮಿಸುವ ನಿರೀಕ್ಷೆಯಿದ್ದು, ಇದಕ್ಕೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲಾಗುವುದು,” ಎಂದು ತಿಳಿಸಿದ್ದಾರೆ.
ಈ ಸಭೆಯಲ್ಲಿ ಜಿಪಂ ಯೋಜನ ನಿರ್ದೇಶಕ ಶ್ರೀನಿವಾಸ್ ರಾವ್, ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ವಿ.ನಾಯಕ್, ಡಿಡಿಪಿಯು ಮಾರುತಿ, ಕೈಗಾರಿಕಾ ಉದ್ದಿಮೆಗಳ ಸಂಘದ ಅಧ್ಯಕ್ಷ ಹರೀಶ್ ಕುಂದರ್, ಟ್ರೈನಿಂಗ್ ಇನ್ಸ್ಟಿಟ್ಯೂಟ್ನ ಮುಖ್ಯಸ್ಥರು, ವಿವಿಧ ಕಾಲೇಜುಗಳ ಪ್ರತಿನಿ ಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


