ಬೆಳ್ತಂಗಡಿ : ಮೇ 10 ರಂದು ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ದಿ. ಕುಂಞಿರಾಮನ್ ನಾಯರ್ ಅವರ ಪತ್ನಿ ಕಲ್ಯಾಣಿ(96) ಹಾಗೂ ಅವರ ಪುತ್ರ ಖ್ಯಾತ ಜನಪದ ಕಲಾವಿದ, ಶಿಕ್ಷಕ ಜಯರಾಂ ಕೆ (58) ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಪರಿಣಾಮ ಕಲ್ಯಾಣಿ ಅವರು ಸಾವನ್ನಪ್ಪಿದ್ದರು. ಜಯರಾಂ ಅವರು ಗಂಭೀರ ಸ್ಥಿತಿಯಲ್ಲಿದ್ದರಿಂದ ಅವರಿಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮೇ.16 ರಂದು ಸಂಜೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸಂದಿಸದೆ ಇದ್ದದ್ದರಿಂದ ಮನೆಗೆ ಆಂಬುಲೆನ್ಸ್ ಮೂಲಕ ಕರೆತರುತ್ತಿದ್ದಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಸಾಗಿಸಲಾಗಿದೆ.
ಪ್ರಕರಣದ ವಿವರ; ಕಲ್ಯಾಣಿ ಮತ್ತು ಜಯರಾಂ ಕೆ ಅವರು ಕೂಳೂರು ಮನೆಯಲ್ಲಿ ಮೇ. 10 ರಂದು ಬೆಳಗ್ಗೆ ಜಯರಾಂ ಅವರ ಮನೆಯ ಬಳಿಯಿಂದ ಯಾವುದೇ ಶಬ್ದ ಕೇಳದೆ ಇದ್ದುದರಿಂದ ನೆರೆ ಹೊರೆ ಯವರು ಬಂದು ನೋಡಿದಾಗ ತಾಯಿ ಮತ್ತು ಮಗ ಮನೆಯೊಳಗೆ ದೇವರ ಕೋಣೆಯ ಎದುರು ಜೊತೆಯಾಗಿ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಬಳಿಕ ಊರವರ ಸಹಕಾರದೊಂದಿಗೆ ಮನೆಯ ಬಾಗಿಲು ತೆಗೆದು ಒಳ ಪ್ರವೇಶಿಸಿದಾಗ ಇಬ್ಬರೂ ಉಸಿರಾಡುತ್ತಿದ್ದರು. ತಕ್ಷಣ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಆರಂಭಿಸಲಾಯಿತು. ಮೂರು ದಿನಗಳವರೆಗೂ ತೀವ್ರ ನಿಗಾ ಘಟಕದಲ್ಲಿದ್ದ ಅವರ ಪೈಕಿ ತಾಯಿ ಕಲ್ಯಾಣಿ ಅವರು ಮೇ.12 ರಂದು ಕೊನೆಯುಸಿರೆಳೆದಿದ್ದರು. ಮಗ ಜಯರಾಂ ಕೆ ಅವರು ಆರೋಗ್ಯ ಸ್ಥಿತಿ ಇನ್ನಷ್ಟು ವಿಷಮಿಸಿದ್ದರಿಂದ ಅವರನ್ನು ಮಂಗಳೂರಿಗೆ ಸಾಗಿಸಲಾಗಿತ್ತು. ಆದರೆ ಇಂದು ಅವರು ಕೂಡ ಸಾವನ್ನಪ್ಪಿದ್ದಾರೆ.


