ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆ ಕುರಿತ ಟೆಂಡರ್ ನಲ್ಲಿ ಗೋಲ್ ಮಾಲ್ ಹಾಗೂ ಅಧಿಕ ದರ ವಸೂಲಿ ಆರೋಪದಡಿ ಇಂಧನ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ನ್ಯಾಯಾಲಯದಲ್ಲಿ ಬಿಜೆಪಿ ಶಾಸಕರಿಂದ ಖಾಸಗಿ ದೂರು ದಾಖಲಾಗಿದೆ.
ಮಲ್ಲೇಶ್ವರಂ ಶಾಸಕ ಡಾ. ಸಿ.ಎನ್. ಅಶ್ವಥ್ ನಾರಾಯಣ, ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಮತ್ತು ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್, ಇಂಧನ ಇಲಾಖೆ ಎಸಿಎಸ್ ಗೌರವ್ ಗುಪ್ತ, ಹಿಂದಿನ ಬೆಸ್ಕಾಂ ಎಂಡಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂರ್ನಾಲ್ಕು ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಖಾಸಗಿ ದೂರು ದಾಖಲಿಸಲಾಗಿದ್ದು, ವಿಚಾರಣೆ ನಾಳೆಗೆ ಮುಂದೂಡಲ್ಪಟ್ಟಿದೆ. ಈ ಮಧ್ಯೆ ನಿನ್ನೆ ರಾಜ್ಯಪಾಲರನ್ನು ಭೇಟಿ ಮಾಡಿದ್ದ ಶಾಸಕ ಡಾ. ಅಶ್ವಥ್ ನಾರಾಯಣ ಮತ್ತು ಧೀರಜ್ ಮುನಿರಾಜು ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಮನವಿ ಸಲ್ಲಿಸಿದ್ದರು.
ರಾಜಶ್ರೀ ಕಂಪನಿಗೆ ಸ್ಮಾರ್ಟ್ ಮೀಟರ್ ಟೆಂಡರ್ ನೀಡಿರುವುದನ್ನು ಬಿಜೆಪಿ ವಿರೋಧಿಸಿದ್ದು, ಕಳೆದ ವಿಧಾನಸಭೆ ಅಧಿವೇಶನದಲ್ಲಿ ಕೂಡಾ ಸಾಕಷ್ಟು ಗದ್ದಲಕ್ಕೆ ಕಾರಣವಾಗಿತ್ತು.


