ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು(NDA) ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಆಡಳಿತ ಪಕ್ಷದ ಉಪ ರಾಷ್ಟ್ರಪತಿ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಅಧಿಕಾರವನ್ನು ಗುರುವಾರದಂದು ನೀಡಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
ಅವರು ಈ ನಿರ್ಧಾರವನ್ನು ಸಂಸತ್ತಿನ ಸಂಕೀರ್ಣದಲ್ಲಿ ಪ್ರಮುಖ ಬಿಜೆಪಿ ನಾಯಕರು ಮತ್ತು ಅವರ ಮಿತ್ರಪಕ್ಷಗಳ ಸಭೆ ನಡೆದ ಸಂದರ್ಭದಲ್ಲಿ ತಿಳಿಸಿ, ಇದು ಸರ್ವಾನುಮತದ ನಿರ್ಧಾರ ಎಂದು ಹೇಳಿದರು.
ಈ ಸಭೆಯ ಅಧ್ಯಕ್ಷತೆಯನ್ನು ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಅವರು ವಹಿಸಿದ್ದು, ನಡ್ಡಾ ಜತೆಗೆ , ಅಮಿತ್ ಶಾ, ಜೆಡಿ (ಯು) ನ ಲಲನ್ ಸಿಂಗ್, ಶಿವಸೇನೆ ನಾಯಕ ಶ್ರೀಕಾಂತ್ ಶಿಂಧೆ, ಟಿಡಿಪಿಯ ಲಾವು ಶ್ರೀ ಕೃಷ್ಣ ದೇವರಾಯಲು ಮತ್ತು ಎಲ್ಜೆಪಿ (ರಾಮ್ ವಿಲಾಸ್) ನ ನಾಯಕ ಚಿರಾಗ್ ಪಾಸ್ವಾನ್ ಸಭೆಯಲ್ಲಿ ಭಾಗವಹಿಸಿದ್ದರು.
ಇನ್ನು ಈಗಾಗಲೇ ಚುನಾವಣೆಯ ದಿನಾಂಕ ನಿಗದಿಯಾಗಿದ್ದು, ಆಗಸ್ಟ್ 12, ಮಂಗಳವಾರದಂದು ಎನ್ ಡಿಎ ಅಭ್ಯರ್ಥಿ ಘೋಷಣೆಯಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್ 9 ರಂದು ಮತದಾನ ನಡೆಯಲಿದೆ.
ಎನ್ ಡಿಎ ಅಭ್ಯರ್ಥಿಯಾಗಿ ಬಿಹಾರ ಮುಖ್ಯಮಂತ್ರಿ ಮತ್ತು ಎನ್ಡಿಎ ಮಿತ್ರಪಕ್ಷ ಜೆಡಿ (ಯು) ನಾಯಕ ನಿತೀಶ್ ಕುಮಾರ್, ಮತ್ತೊಬ್ಬ ಜೆಡಿ(ಯು) ನಾಯಕ ಹರಿವಂಶ್ ಸಿಂಗ್, ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತ ದಿವಂಗತ ಕರ್ಪೂರಿ ಠಾಕೂರ್ ಅವರ ಪುತ್ರ ರಾಮ್ ನಾಥ್ ಠಾಕೂರ್ ,ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಹೆಸರುಗಳು ಕೇಳಿ ಬರುತ್ತಿವೆ.


