ಕಡಬ: ಮದುವೆಯಾಗಿಲ್ಲ ಎಂದು ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದಲ್ಲಿ ನಡೆದಿದೆ. ಮೋನಪ್ಪ (33) ಮೃತ ಯುವಕ.
ದೋಳ್ಪಾಡಿ ಗ್ರಾಮದ ಅಜ್ಜಿನಡ್ಕದಲ್ಲಿ ತಾಯಿ, ಸಹೋದರರು ಹಾಗೂ ಕುಟುಂಬದೊಂದಿಗೆ ವಾಸವಾಗಿದ್ದರು. ಕೂಲಿ ಕೆಲಸ ಮಾಡಿಕೊಂಡಿದ್ದ ಮೋನಪ್ಪ ಅವರಿಗೆ 33 ವರ್ಷ ವಯಸ್ಸಾದರೂ ಸಂಬಂಧ ಕೂಡಿ ಬರುತ್ತಿರಲಿಲ್ಲ. ಇದರಿಂದಾಗಿ ಅವರು ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ.
ಇದೇ ವಿಚಾರವಾಗಿ ದಿನಾಂಕ 18-01-2026 ರಂದು ಸಂಜೆ 4:30ರ ಸುಮಾರಿಗೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮೋನಪ್ಪ ವಿಷ ಪದಾರ್ಥ ಸೇವಿಸಿದ್ದರು. ತಾಯಿ ಮನೆಗೆ ಬಂದಾಗ ಮಗ ಅಸ್ವಸ್ಥಗೊಂಡಿರುವುದು ಕಂಡುಬಂದಿದೆ. ಕೂಡಲೇ ನೆರೆಹೊರೆಯವರ ಸಹಾಯದಿಂದ ಅವರನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮೋನಪ್ಪ ಅವರನ್ನು ಮಂಗಳೂರಿನ ವೆನ್ಲಾಕ್ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ದಿನಾಂಕ 24-01-2026 ರಂದು ಸಂಜೆ 5:06 ಗಂಟೆಗೆ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


