ಕಡಬ ಮೂಲದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಲಾರೆನ್ಸ್ ಎಂಬವರ ಪುತ್ರಿ ಸ್ವೀಟಿ (18) ಮೃತ ವಿದ್ಯಾರ್ಥಿನಿ.
ಸ್ವೀಟಿ ಉಡುಪಿಯ ಖಾಸಗಿ ಕಾಲೇಜೊಂದರಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜಿನ ವಸತಿ ನಿಲಯದಲ್ಲೇ ವಾಸ್ತವ್ಯ ಹೂಡಿದ್ದರು. ಫೆಬ್ರವರಿ 25ರಂದು ರಾತ್ರಿ ತರಗತಿ ಮುಗಿಸಿ ವಸತಿ ನಿಲಯಕ್ಕೆ ಮರಳಿದ್ದ ಸ್ವೀಟಿ, ಅಲ್ಲಿಯೇ ಇಲಿ ಪಾಷಣ ಸೇವಿಸಿದ್ದಳು ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸಹಪಾಠಿಗಳು ಮತ್ತು ಕಾಲೇಜು ಮಂಡಳಿಯವರು ತಕ್ಷಣವೇ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
ಆಕೆಯ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಕಳೆದ ಕೆಲವು ದಿನಗಳಿಂದ ತೀವ್ರ ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಮಾರ್ಚ್ 3ರಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ವೈಯಕ್ತಿಕ ಕಾರಣಗಳಿಂದಾಗಿ ಮನನೊಂದು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿಗಳು ತಿಳಿಸಿವೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


