ಕುಂದಾಪುರ: ಮನೆಯ ಸಮೀಪದ ಬಾವಿಯಲ್ಲಿ ಯುವತಿಯ ಶವ ಪತ್ತೆಯಾಗಿರುವ ಘಟನೆ ತಲ್ಲೂರು ಗ್ರಾಮದ ಕೋಟೆಬಾಗಿಲು ಎಂಬಲ್ಲಿ ನಡೆದಿದೆ. ಶಶಿಕಲಾ (20) ಮೃತ ಯುವತಿ.
ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಕ್ಲೀನಿಂಗ್ ಕೆಲಸ ಮಾಡುತ್ತಿದ್ದ ಶಶಿಕಲಾ, ಎಪ್ರಿಲ್ 3ರಂದು ಕೆಲಸಕ್ಕೆ ರಜೆ ಹಾಕಿ ಮನೆಯಲ್ಲಿದ್ದರು. ಸಂಜೆ 7 ಗಂಟೆಯ ಸುಮಾರಿಗೆ ಮನೆಯಿಂದ ಹೊರಹೋದವರು ವಾಪಸ್ ಬಾರದೇ ಇದ್ದಾಗ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ರಾತ್ರಿ 9:20ರ ಸುಮಾರಿಗೆ ಮನೆಯಿಂದ ಸುಮಾರು 100 ಮೀಟರ್ ದೂರದಲ್ಲಿರುವ ಕನಕಮ್ಮ ಶೆಡ್ತಿ ಎಂಬುವವರ ಜಾಗದ ಹೊಸ ಬಾವಿಯಲ್ಲಿ ಶಶಿಕಲಾ ಅವರ ಮೃತದೇಹ ಪತ್ತೆಯಾಗಿದೆ.
ಮೃತ ಶಶಿಕಲಾ ಅವರು ಕಳೆದ ಒಂದು ವರ್ಷದಿಂದ ಮಂಜುನಾಥ ಎಂಬುವವರನ್ನು ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಈ ವಿಚಾರ ಮನೆಯವರಿಗೂ ತಿಳಿದಿತ್ತು. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಕುಂದಾಪುರ ಪೊಲೀಸರು ಯುಡಿಆರ್ ಕ್ರಮಾಂಕ 11/2026, ಕಲಂ 194 (3)(iv) BNSS ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


