ಬೆಂಗಳೂರು; ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ಕುರಿತು ಮಾಹಿತಿ ನೀಡಿದ್ದು, ಪರೀಕ್ಷಾ ಮಂಡಳಿಯು ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.
ರಾಜ್ಯದ ಎರಡು ಕ್ಷೇತ್ರಗಳಲ್ಲಿ ನಾಳೆ ಉಪ ಚುನಾವಣೆ ನಡೆಯುತ್ತಿರುವುದರಿಂದ, ಮತದಾನದ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಸಂಜೆ ವೇಳೆಗೆ ಶಿಕ್ಷಣ ಸಚಿವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ವಿವರಗಳನ್ನು ಹಂಚಿಕೊಳ್ಳಲಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಈಗಾಗಲೇ ಅಂಕಪಟ್ಟಿಗಳನ್ನು ಅಪ್ಲೋಡ್ ಮಾಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ.
ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ನಡೆದಿದ್ದ ಈ ಪರೀಕ್ಷೆಯ ಫಲಿತಾಂಶ ಬಂದ ನಂತರ, ತಮ್ಮ ಅಂಕಗಳಿಂದ ತೃಪ್ತರಾಗದ ವಿದ್ಯಾರ್ಥಿಗಳಿಗೆ ಮರುಮೌಲ್ಯಮಾಪನ ಮತ್ತು ಸ್ಕ್ಯಾನ್ ಪ್ರತಿ ಪಡೆಯಲು ಅವಕಾಶ ನೀಡಲಾಗುವುದು. ಫಲಿತಾಂಶದ ಘೋಷಣೆಯ ನಂತರ ಈ ಅರ್ಜಿ ಸಲ್ಲಿಕೆಯ ದಿನಾಂಕಗಳನ್ನು ಮಂಡಳಿಯು ಅಧಿಕೃತವಾಗಿ ಬಿಡುಗಡೆ ಮಾಡಲಿದೆ.


