ಸುಳ್ಯ: ಕಾರು ಅಡ್ಡಗಟ್ಟಿ ಕಣ್ಣಿಗೆ ಖಾರದ ಪುಡಿ ಎರಚಿ ದರೋಡೆಗೆ ಯತ್ನಿಸಿರುವ ಘಟನೆ ಸುಳ್ಯ ತಾಲೂಕಿನ ಪುತ್ತಿಲ ಎಂಬಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.
ಅರುಣ್ ಕುಮಾರ್ ಅವರು ಸುಳ್ಯದಿಂದ ಬೆಳ್ಳಾರೆ ಮಾರ್ಗವಾಗಿ ಮರ್ದಾಳಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ರಾತ್ರಿ 12 ಗಂಟೆ ಸುಮಾರಿಗೆ ಪುತ್ತಿಲ ತಿರುವಿನಲ್ಲಿ ಮೂತ್ರ ವಿಸರ್ಜನೆಗಾಗಿ ಕಾರು ನಿಲ್ಲಿಸಿದ್ದರು. ಈ ವೇಳೆ ಅಪರಿಚಿತರು ಕಲ್ಲು ತೂರಾಟ ನಡೆಸಿದ್ದು, ಕಾರಿನ ಗ್ಲಾಸ್ ಬಿರುಕು ಬಿಟ್ಟಿದೆ. ಅರುಣ್ ಅವರು ಕಾರನ್ನು ಚಲಾಯಿಸಲು ಯತ್ನಿಸಿದಾಗ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರ ಶರ್ಟ್ ಕಾಲರ್ ಹಿಡಿದು ಮುಖಕ್ಕೆ ಖಾರದ ಪುಡಿ ಎರಚಿದ್ದಾರೆ.
ದುಷ್ಕರ್ಮಿಗಳಿಂದ ಹೇಗೋ ತಪ್ಪಿಸಿಕೊಂಡ ಅರುಣ್ ಕುಮಾರ್ ಅವರು ಮುಂದೆ ಸಾಗಿ ರಸ್ತೆ ಬದಿಯಲ್ಲಿದ್ದವರಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಯಿತಾದರೂ, ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿ ಆರೋಪಿಗಳು ಪರಾರಿಯಾಗಿದ್ದಾರೆ. ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪುತ್ತೂರಿನ ವೈಜ್ಞಾನಿಕ ವಿಶ್ಲೇಷಣಾ ತಂಡವು ಸ್ಥಳಕ್ಕೆ ಭೇಟಿ ನೀಡಿ ಪುರಾವೆಗಳನ್ನು ಸಂಗ್ರಹಿಸಿದೆ.


