ಉಡುಪಿ: 23 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಉಡುಪಿ ಹಾಗೂ ಮಲ್ಪೆ ಠಾಣಾ ಅಪರಾಧ ಪ್ರಕರಣದಲ್ಲಿ ಆರೋಪಿಯಾಗಿದ್ದ ಬೆಂಗಳೂರು ನಿವಾಸಿ ಎಂ. ಬಾಬು (52) ಬಂಧಿತ ಆರೋಪಿ. ಈತ ಕಳೆದ 23 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ಪರಾರಿಯಾಗಿದ್ದ.
ಆರೋಪಿಯ ಪತ್ತೆಗಾಗಿ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕರ ಮಾರ್ಗದರ್ಶನದಲ್ಲಿ, ಮಲ್ಪೆ ಪೊಲೀಸ್ ಠಾಣಾ ಉಪನಿರೀಕ್ಷಕ ಅನೀಲ್ ಕುಮಾರ್ ಡಿ ಅವರ ನೇತೃತ್ವದಲ್ಲಿ ಕಳೆದ ಐದು ತಿಂಗಳಿನಿಂದ ಮಾಹಿತಿ ಸಂಗ್ರಹಿಸಿ ಶೋಧ ಕಾರ್ಯ ನಡೆಸಲಾಗಿತ್ತು.
ಖಚಿತ ಮಾಹಿತಿ ಮೇರೆಗೆ ಠಾಣಾ ಸಿಬ್ಬಂದಿಗಳಾದ ಹೆಡ್ ಕಾನ್ಸ್ಟೇಬಲ್ ಸುರೇಶ್ ಕುಮಾರ್ ಮತ್ತು ಹೆಡ್ ಕಾನ್ಸ್ಟೇಬಲ್ ವಿಶ್ವನಾಥ್ ಎಚ್. ಅವರು ಏಪ್ರಿಲ್ 12ರಂದು ಬೆಂಗಳೂರಿಗೆ ತೆರಳಿ, ಏಪ್ರಿಲ್ 14ರಂದು ರಾಮಮೂರ್ತಿ ನಗರದಲ್ಲಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದರು.
ಬಂಧಿತನನ್ನು ಏಪ್ರಿಲ್ 15ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಏಪ್ರಿಲ್ 28ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.


