ಬೆಂಗಳೂರು; ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಜೇನುಗೂಡಿಗೆ ಕೈ ಹಾಕಿದೆ; ಉಡುಪಿ ಶಾಸಕ ಯಶಪಾಲ್ ಸುವರ್ಣ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ವಸ್ತ್ರ ಸಂಹಿತೆ ಕುರಿತು ರಾಜ್ಯ ಸರ್ಕಾರದ ಆದೇಶ ವಿಚಾರ ಬಗ್ಗೆ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಜೇನುಗೂಡಿಗೆ ಕೈ ಹಾಕಿದೆ. ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟ ಆಡಲು ಹೊರಟಿದೆ. ಶಿಕ್ಷಣ ಸಂಸ್ಥೆಗಳನ್ನು ಇಸ್ಲಾಮೀಕರಣ ಮಾಡಲು ಹೊರಟಿದ್ದಾರೆ .ಮಮತಾ ಬ್ಯಾನರ್ಜಿ ಮಾದರಿಯಲ್ಲಿ ಕರ್ನಾಟಕವನ್ನು ಮಾಡಲು ಹೊರಟಿದ್ದಾರೆ ಎಂದಿದ್ದಾರೆ.
ಮಮತಾ ಬ್ಯಾನರ್ಜಿಗೂ ಸಿದ್ದರಾಮಯ್ಯಗೂ ವ್ಯತ್ಯಾಸ ಇಲ್ಲ. ಹಿಂದೆ ಉಡುಪಿಯಲ್ಲಿ ದೊಡ್ಡ ಹೋರಾಟ ಆದಾಗ ಆ ವಿದ್ಯಾರ್ಥಿಗಳ ಹಿಂದೆ ಇದ್ದಿದ್ದು ಪಿಎಫ್ ಐ ಕಾರ್ಯಕರ್ತರು ಅಂತಾ ಸಾಬೀತಾಗಿತ್ತು. ಶಿಕ್ಷಣ ಇಲಾಖೆಯಲ್ಲಿ ಬಹಳಷ್ಟು ಸಮಸ್ಯೆಗಳಿವೆ. ಇದನ್ನೆಲ್ಲಾ ಸರ್ಕಾರ ಪರಿಶೀಲಿಸಿ ಮೂಲಭೂತ ಸೌಕರ್ಯಕ್ಕೆ ಹೆಚ್ಚು ಒತ್ತು ಕೊಡಬೇಕು. ಆದೇಶ ಹಿಂಪಡೆಯುವ ಮೂಲಕ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ದಾವಣಗೆರೆ ಉಪಚುನಾವಣೆ ಸಮಯದಲ್ಲಿ ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸ ಆಗಿದೆ. ಕಾಂಗ್ರೆಸ್ ಗೆ ಸೆಡ್ಡು ಹೊಡಿಯುವ ಭಯ ಅವರಿಗೆ ಉಂಟಾಗಿದೆ. ವಿದ್ಯಾರ್ಥಿಗಳಲ್ಲಿ ವಿಷ ಬೀಜ ಬಿತ್ತುವ ಕೆಲಸ ಸರ್ಕಾರ ಮಾಡುತ್ತಿದೆ. ಸುಪ್ರೀಂ ಕೋರ್ಟ್ ನಲ್ಲಿ ವಿಚಾರ ಬಾಕಿ ಇರುವಾಗ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಆಗಲ್ಲ.ಸಿಎಂ ಮತ್ತು ಮಧು ಬಂಗಾರಪ್ಪ ಕಾನೂನು ಅಭಿಪ್ರಾಯ ಪಡೆಯುವುದನ್ನು ಬೆಳೆಸಿಕೊಳ್ಳಬೇಕು.ಆದೇಶ ಹಿಂಪಡೆದ ವಿರುದ್ಧ ನಾವು ಹೋರಾಟ ಮಾಡುತ್ತೇವೆ. ಮುಂದೆ ಹಿಂದೂ ಬಾಂಧವರು ಕೇಸರಿ ಪಂಚೆ ಹಾಕಿಕೊಂಡು ಹೋದಾಗ ಮತ್ತಷ್ಟು ಗೊಂದಲ ಉಂಟಾಗುವ ಸಾಧ್ಯತೆ ಇದೆ. ಮುಂದಾಗುವ ಪರಿಣಾಮಗಳಿಗೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.


