ಮಂಗಳೂರು: ಅಮಾನವೀಯವಾಗಿ ಈಚರ್ ವಾಹನದಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದದ್ದನ್ನು ಪತ್ತೆ ಹಚ್ಚಿದ ಪೊಲೀಸರು 27 ಕೋಣಗಳನ್ನು ರಕ್ಷಿಸಿದ ಘಟನೆ ಶನಿವಾರ ಮುಂಜಾನೆ ಜಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ.
ಹಾವೇರಿ ಜಿಲ್ಲೆಯಿಂದ ಕೇರಳ ರಾಜ್ಯದ ಕಡೆಗೆ ಜಾನುವಾರುಗಳನ್ನು ಕಾನೂನುಬಾಹಿರವಾಗಿ ಸಾಗಿಸಲಾಗುತ್ತಿದೆ ಎಂಬ ಬಗ್ಗೆ ಬಜರಂಗದಳದ ಕಾರ್ಯಕರ್ತರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಕಾರ್ಯಕರ್ತರು ತಕ್ಷಣವೇ ಈ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಜಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಈಚರ್ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಯಾವುದೇ ಅಧಿಕೃತ ಪರವಾನಗಿ ಅಥವಾ ಸಾಗಾಟದ ದಾಖಲೆಗಳಿಲ್ಲದೆ, ನಿಯಮಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ ವಾಹನದಲ್ಲಿ ಕೋಣಗಳನ್ನು ತುಂಬಿಸಲಾಗಿತ್ತು. ಹಾವೇರಿಯಿಂದ ಇವುಗಳನ್ನು ಕೇರಳಕ್ಕೆ ಸಾಗಿಸಲಾಗುತ್ತಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ರಕ್ಷಿಸಲಾದ ಎಲ್ಲಾ 27 ಜಾನುವಾರುಗಳನ್ನು ಸುರಕ್ಷಿತವಾಗಿ ಸ್ಥಳೀಯ ಗೋಶಾಲೆಗೆ ರವಾನಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಅಕ್ರಮ ಸಾಗಾಟಕ್ಕೆ ಬಳಸಲಾದ ಈಚರ್ ವಾಹನವನ್ನು ಜಪ್ತಿ ಮಾಡಲಾಗಿದ್ದು, ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.


