ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿನ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿಯಲ್ಲೇ ಪರ ಮತ್ತು ವಿರೋಧಕ್ಕೆ ಕಾರಣವಾಗಿದ್ದ ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸುವ ವಿಚಾರಕ್ಕೆ ತೆರೆ ಬಿದ್ದಿದೆ.
ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ನಡೆಸುವುದಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಮತ್ತು ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಆರ್. ಅಶೋಕ್ ನವದೆಹಲಿಯಲ್ಲಿ ಇಂದು ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ನವದೆಹಲಿಯಲ್ಲಿ ಇಂದು ಭೇಟಿಯಾದ ಸಂದರ್ಭದಲ್ಲಿ ಕೂಡಾ ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸುವುದು ಬೇಡ ಎಂಬ ಸೂಚನೆ ರಾಜ್ಯ ಬಿಜೆಪಿ ನಾಯಕರಿಗೆ ನಿರ್ದೇಶನ ಸಿಕ್ಕಿದೆ ಎನ್ನಲಾಗಿದೆ.
ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಚಿವ ಶ್ರೀರಾಮುಲು ಮತ್ತು ಶಾಸಕ ಸುರೇಶ್ ಕುಮಾರ್ ಸೇರಿದಂತೆ ಹಲವು ಬಿಜೆಪಿ ನಾಯಕರಿಂದ ಧರ್ಮಸ್ಥಳದ ವಿಚಾರ ಎಳೆದು ತರದಂತೆ ಆಕ್ಷೇಪ ವ್ಯಕ್ತವಾಗಿತ್ತು.


