
ಪೋಕ್ಸೋ ಪ್ರಕರಣವೊಂದರಲ್ಲಿ ವಚನಾನಂದ ಸ್ವಾಮೀಜಿಗೆ ಸಿಕ್ಕಿದ್ದ ನಿರೀಕ್ಷಣಾ ಜಾಮೀನನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸುವ ಮೂಲಕ ಭಾರಿ ಆಘಾತ ನೀಡಿದೆ.
ತಮ್ಮ ವಿರುದ್ಧ ಎಫ್ಐಆರ್ ದಾಖಲಾಗುವ ಮುನ್ನವೇ ಸ್ವಾಮೀಜಿ ನಿರೀಕ್ಷಣಾ ಜಾಮೀನು ಪಡೆದಿದ್ದನ್ನು ಪ್ರಶ್ನಿಸಿ, ಸಂತ್ರಸ್ತ ಬಾಲಕನ ತಾಯಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ, ಗಂಭೀರ ಸೆಕ್ಷನ್ಗಳಿರುವ ಪೋಕ್ಸೋ ಕೇಸ್ನಲ್ಲಿ ಪ್ರಕರಣ ದಾಖಲಾಗುವ ಮುನ್ನವೇ ನಿರೀಕ್ಷಣಾ ಜಾಮೀನು ನೀಡಿರುವ ವಿಧಾನ ಸರಿಯಲ್ಲ ಎಂದು ಕಳವಳ ವ್ಯಕ್ತಪಡಿಸಿ, ಜಾಮೀನನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಆದರೆ ನಿಯಮಿತ (ರೆಗ್ಯುಲರ್) ಜಾಮೀನು ಅರ್ಜಿ ಸಲ್ಲಿಸಲು ಹೈಕೋರ್ಟ್ ಸ್ವಾಮೀಜಿಗೆ 3 ವಾರಗಳ ಕಾಲಾವಕಾಶ ನೀಡಿದ್ದು, ಅಲ್ಲಿಯವರೆಗೂ ಹಳೆಯ ನಿರೀಕ್ಷಣಾ ಜಾಮೀನಿನ ರಕ್ಷಣೆ ಮುಂದುವರಿಯಲಿದೆ. ಹೀಗಾಗಿ, ಸ್ವಾಮೀಜಿಗೆ ಸದ್ಯಕ್ಕೆ ಬಂಧನದಿಂದ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ಸ್ವಾಮೀಜಿ ವಿರುದ್ಧ ಮಕ್ಕಳ ದುರ್ಬಳಕೆ ಹಾಗೂ ದೌರ್ಜನ್ಯ ಎಸಗಿದ ಆರೋಪದಡಿ ದಾಖಲಾಗಿದ್ದ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಸ್ವಾಮೀಜಿ, ಏಪ್ರಿಲ್ 21ರಂದು ದಾವಣಗೆರೆ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಜಿಲ್ಲಾ ನ್ಯಾಯಾಲಯ ಷರತ್ತುಗಳೊಂದಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.


