
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ. ಸಿ. ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬಳ ಮೇಲೆ ಯುವಕನೋರ್ವ ಕತ್ತಿಯಿಂದ ಭೀಕರವಾಗಿ ದಾಳಿ ನಡೆಸಿ ಹತ್ಯೆ ಮಾಡಿ ಪರಾರಿಯಾಗಿರುವ ಆಘಾತಕಾರಿ ಘಟನೆ ಸಂಭವಿಸಿದೆ. ಕಕ್ಕೆಪದವು ನಿವಾಸಿ ಲಾವಣ್ಯ(25) ಸಾವನ್ನಪ್ಪಿದವಳು.

ಬಿ. ಸಿ. ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಕಕ್ಕೆಪದವು ಮಾರ್ಗವಾಗಿ ಸಂಚರಿಸುವ ಸರ್ಕಾರಿ ಬಸ್ಸಿನೊಳಗೆ ಯುವತಿ ಕುಳಿತಿದ್ದಳು. ಈ ವೇಳೆ ಆಕೆಯನ್ನು ಹಿಂಬಾಲಿಸಿಕೊಂಡು ಬಂದ ಯುವಕ, ಬಸ್ಸಿನೊಳಗೆ ನುಗ್ಗಿ ಯುವತಿಯನ್ನು ಬಲವಂತವಾಗಿ ಕೆಳಗಿಳಿಸಿದ್ದಾನೆ. ಬಳಿಕ ಸಾರ್ವಜನಿಕರ ಸಮ್ಮುಖದಲ್ಲೇ ಕತ್ತಿಯಿಂದ ಆಕೆಯ ಮೇಲೆ ಭೀಕರವಾಗಿ ಹಲ್ಲೆ ನಡೆಸಿ, ಕೊಂದು ಸ್ಥಳದಿಂದ ಪರಾರಿಯಾಗಿದ್ದಾನೆ.
ಪೊಲೀಸ್ ಭೇಟಿ, ತನಿಖೆ ಚುರುಕು: ವಿಷಯ ತಿಳಿಯುತ್ತಿದ್ದಂತೆಯೇ ಬಂಟ್ವಾಳ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಅರುಣ್ ಕುಮಾರ್ ಅವರು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿ ಯುವಕನ ಪತ್ತೆಗಾಗಿ ಎಸ್ಪಿ ಅರುಣ್ ಕುಮಾರ್ ಅವರು ಎರಡು ಪ್ರತ್ಯೇಕ ಪೊಲೀಸ್ ತಂಡಗಳನ್ನು ರಚಿಸಿದ್ದು, ಆರೋಪಿಗಾಗಿ ತೀವ್ರ ಹುಡುಕಾಟ ಆರಂಭಿಸಿದ್ದಾರೆ.


