
ಬೆಳ್ತಂಗಡಿ : ನವದೆಹಲಿದಲ್ಲಿ ತಮ್ಮ ನ್ಯಾಯಸಮ್ಮತ ಬೇಡಿಕೆಗಳಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವುದು ಅತ್ಯಂತ ಖಂಡನೀಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುವ ಯುವಜನರ ಮೇಲೆ ಬಲಪ್ರಯೋಗ ನಡೆಸಿರುವುದು ಕೇಂದ್ರ ಸರ್ಕಾರದ ದಮನಕಾರಿ ಮನೋಭಾವವನ್ನು ಬಯಲಿಗೆಳೆದಿದೆ ಎಂದು ಕೆಪಿಸಿಸ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದ್ದಾರೆ.
ದೇಶದ ಯುವಕರು ಉದ್ಯೋಗ, ಶಿಕ್ಷಣ ಹಾಗೂ ಭವಿಷ್ಯದ ಭದ್ರತೆಗಾಗಿ ತಮ್ಮ ಅಳಲನ್ನು ವ್ಯಕ್ತಪಡಿಸುತ್ತಿದ್ದಾರೆ. ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳುವ ಬದಲು, ಲಾಠಿ ಚಾರ್ಜ್ ಮೂಲಕ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ.ದೇಶದ ಯುವಕರಿಗೆ ಉದ್ಯೋಗದ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕೇಂದ್ರ ಸರ್ಕಾರ ಇಂದು ಅದೇ ಯುವಕರ ಮೇಲೆ ದೌರ್ಜನ್ಯ ನಡೆಸುತ್ತಿರುವುದು ಅತ್ಯಂತ ವಿಷಾದನೀಯ. ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕುವುದರಿಂದ ಸಮಸ್ಯೆಗಳು ಪರಿಹಾರವಾಗುವುದಿಲ್ಲ. ಅವರ ನ್ಯಾಯಯುತ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿ, ಸಂವಾದದ ಮೂಲಕ ಪರಿಹಾರ ಕಂಡುಕೊಳ್ಳಬೇಕು ಎಂದಿದ್ದಾರೆ. ಲಾಠಿ ಚಾರ್ಜ್ನಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ಮತ್ತು ನ್ಯಾಯ ಒದಗಿಸಬೇಕು. ಈ ಘಟನೆಯ ಕುರಿತು ಪಾರದರ್ಶಕ ತನಿಖೆ ನಡೆಸಿ, ಹೊಣೆಗಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಾನು ಕೇಂದ್ರ ಸರ್ಕಾರವನ್ನು ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷವು ಸದಾ ವಿದ್ಯಾರ್ಥಿಗಳು ಹಾಗೂ ಯುವಜನರ ಹಕ್ಕುಗಳ ಪರವಾಗಿ ನಿಲ್ಲಲಿದೆ. ದೇಶದ ಪ್ರಜಾಪ್ರಭುತ್ವ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸಂವಿಧಾನಾತ್ಮಕ ಹಕ್ಕುಗಳ ರಕ್ಷಣೆಗೆ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದಿದ್ದಾರೆ.


