
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ವಿರೋಧಿಸಿ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರ ಸೋಗಿನಲ್ಲಿ ಬಂದವರು ಲಾಠಿಚಾರ್ಜ್ ನಡೆಸಿ ದೌರ್ಜನ್ಯ ಎಸಗಿರುವುದನ್ನು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ತೀವ್ರವಾಗಿ ಖಂಡಿಸಿದ್ದಾರೆ.
ಉಡುಪಿಯ ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ದೌರ್ಜನ್ಯವನ್ನು ಖಂಡಿಸಿದ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆಯವರನ್ನು ಬಂಧಿಸುವ ಮೂಲಕ ಬಿಜೆಪಿ ಸರ್ಕಾರವು ಪ್ರಜಾಪ್ರಭುತ್ವದ ಧ್ವನಿಯನ್ನು ಹತ್ತಿಕ್ಕಲು ಯತ್ನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಹಿಂದೆ ಯುವಜನರನ್ನು ಬಳಸಿಕೊಂಡು ಸುಳ್ಳು ಅಪಪ್ರಚಾರದ ಮೂಲಕ UPA ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿದ್ದ ಬಿಜೆಪಿ, ಈಗ ಅದೇ ಯುವಜನರು ತಮ್ಮ ಹಕ್ಕುಗಳಿಗಾಗಿ ಪ್ರಶ್ನೆ ಕೇಳಿದಾಗ ಅವರನ್ನು ದೇಶದ್ರೋಹಿಗಳಂತೆ ಬಿಂಬಿಸುತ್ತಿದೆ ಎಂದು ಅವರು ದೂರಿದರು. ಅಲ್ಲದೆ, ಕಳೆದ 12 ವರ್ಷಗಳಲ್ಲಿ ನೂರಾರು ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿದ್ದು, ಕೇಂದ್ರ ಸರ್ಕಾರಕ್ಕೆ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಸಾಧ್ಯವಾಗುತ್ತಿಲ್ಲ.
ಈ ಸರಣಿ ವೈಫಲ್ಯದ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣವೇ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು.


