
ಬೆಳ್ತಂಗಡಿ; ನೀಟ್ ಪರೀಕ್ಷೆಯ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳು, ಯುವಕರು ಮತ್ತು ವಿವಿಧ ಸಂಘಟನೆಗಳು ನಡೆಸಿದ ಹೋರಾಟವನ್ನು ಧರ್ಮದ ಆಧಾರದ ಮೇಲೆ ವಿಭಜಿಸಿ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ನಾಯಕ ಸಿ.ಟಿ. ರವಿ ಅವರು, ಇದೀಗ ತಮ್ಮ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಪೊಲೀಸ್ ತನಿಖೆಗೆ ಹೆದರುತ್ತಿರುವುದು ಅವರ ದ್ವಂದ್ವ ನಿಲುವಿಗೆ ಸಾಕ್ಷಿಯಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಗಂಭೀರ ವಿಚಾರವನ್ನು ಧರ್ಮದ ಕನ್ನಡಕದಲ್ಲಿ ನೋಡುವುದು ಅತ್ಯಂತ ದುಃಖಕರ. ಶಾಂತಿಯುತ ಪ್ರತಿಭಟನೆಯನ್ನು ನಿರ್ದಿಷ್ಟ ಸಮುದಾಯಕ್ಕೆ ಕಟ್ಟಿ ಹಾಕುವ ಮೂಲಕ ಸಮಾಜದಲ್ಲಿ ದ್ವೇಷ ಮತ್ತು ವಿಭಜನೆ ಸೃಷ್ಟಿಸಲು ಸಿ.ಟಿ. ರವಿ ಯತ್ನಿಸಿದ್ದಾರೆ. ಇಂತಹ ಪ್ರಚೋದನಕಾರಿ ಹೇಳಿಕೆಗಳು ಸಾರ್ವಜನಿಕ ಜೀವನದಲ್ಲಿರುವ ನಾಯಕರಿಗೆ ಶೋಭೆ ತರುವುದಿಲ್ಲ.
ತಾವು ಯಾವುದೇ ತಪ್ಪು ಮಾಡಿಲ್ಲ ಎಂಬ ನಂಬಿಕೆ ಇದ್ದರೆ, ಪೊಲೀಸ್ ತನಿಖೆಗೆ ಸಂಪೂರ್ಣ ಸಹಕರಿಸಬೇಕು. ಆದರೆ ಪ್ರಕರಣ ದಾಖಲಾಗುತ್ತಿದ್ದಂತೆ ತನಿಖೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುವುದು, ತಮ್ಮ ಹೇಳಿಕೆಯ ಬಗ್ಗೆ ಅವರಿಗೇ ಅಪರಾಧ ಪ್ರಜ್ಞೆ ಇದೆ ಎಂಬ ಅನುಮಾನವನ್ನು ಮೂಡಿಸುತ್ತದೆ.ಬಿಜೆಪಿ ನಾಯಕರು ಕಾನೂನಿನ ಬಗ್ಗೆ ದೊಡ್ಡ ದೊಡ್ಡ ಭಾಷಣ ಮಾಡುತ್ತಾರೆ. ಆದರೆ ಅದೇ ಕಾನೂನು ತಮ್ಮ ಮೇಲೆ ಅನ್ವಯವಾದಾಗ ತನಿಖೆಯಿಂದ ತಪ್ಪಿಸಿಕೊಳ್ಳಲು ಯತ್ನಿಸುವುದು ಅವರ ನೈಜ ಮುಖವನ್ನು ಬಹಿರಂಗಪಡಿಸುತ್ತದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ತತ್ವವನ್ನು ಯಾರೂ ಮರೆತಬಾರದು.
ಸಿ.ಟಿ. ರವಿ ಅವರು ತನಿಖೆಯಿಂದ ಓಡಿಹೋಗುವ ಬದಲು ಕಾನೂನಿಗೆ ಗೌರವ ನೀಡಿ ತನಿಖೆಗೆ ಸಹಕರಿಸಬೇಕು. ಸಮಾಜದ ಸಾಮರಸ್ಯಕ್ಕೆ ಧಕ್ಕೆ ತರುವಂತಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದವರು ಅದರ ಕಾನೂನು ಪರಿಣಾಮಗಳನ್ನು ಎದುರಿಸಲು ಸಿದ್ಧರಾಗಿರಬೇಕು.


