
ಕುಂದಾಪುರ: ತಾಲೂಕಿನ ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಶ್ರೀ ಬ್ರಹ್ಮಸ್ಥಾನ ದೇವಸ್ಥಾನದ ಸಮೀಪವಿರುವ ‘ಗುರು ಬ್ರಹ್ಮ ಜನರಲ್ ಸ್ಟೋರ್’ ಎಂಬ ದಿನಸಿ ಅಂಗಡಿಯು ಸೋಮವಾರ ತಡರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಂಪೂರ್ಣವಾಗಿ ಭಸ್ಮವಾಗಿದೆ.
ಅಂಗಡಿಯ ಮಾಲಕ ಸಂತೋಷ್ ಅವರು ರಾತ್ರಿ ವ್ಯಾಪಾರ ಮುಗಿಸಿ ಮನೆಗೆ ತೆರಳಿದ ಬಳಿಕ ಈ ದುರಂತ ಸಂಭವಿಸಿದ್ದು, ಏಕಾಏಕಿ ಹಬ್ಬಿದ ಬೆಂಕಿ ಕ್ಷಣಮಾತ್ರದಲ್ಲಿ ಇಡೀ ಅಂಗಡಿಯನ್ನು ಆವರಿಸಿಕೊಂಡಿದೆ. ಅಂಗಡಿಯಲ್ಲಿದ್ದ ಫ್ರಿಡ್ಜ್ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ದಿನಸಿ ಸಾಮಗ್ರಿಗಳು, ಫ್ರಿಡ್ಜ್ ಹಾಗೂ ಪೀಠೋಪಕರಣಗಳು ನಾಶವಾಗಿವೆ.
ಇನ್ನು ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಕುಂದಾಪುರ ಅಗ್ನಿಶಾಮಕ ಠಾಣಾಧಿಕಾರಿ ವಿ. ಸುಂದರ್, ಸಹಾಯಕ ಠಾಣಾಧಿಕಾರಿ ಖ್ವಾಜಾ ಹುಸೇನ್, ಸಿಬ್ಬಂದಿಗಳಾದ ಸತೀಶ್ ಶೆಣೈ, ಬಸವರಾಜ, ಅಭಿಷೇಕ್ ಹಾಗೂ ರಿಯಾಝ್ ಪಾಟೀಲ್ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.


