
ಮಂಗಳೂರು: ಮಹಿಳೆಯೊಬ್ಬರ ಬಂಗಾರದ ಸರ ಕಸಿದು, ಪೊಲೀಸರ ಮೇಲೆ ಹಲ್ಲೆ ನಡೆಸಿ ವಶದಿಂದ ಪರಾರಿಯಾಗಿದ್ದ ಪ್ರಮುಖ ಆರೋಪಿಯನ್ನು ಮಂಗಳೂರು ನಗರ ಪೊಲೀಸರು ವಿಜಯಪುರದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಾಗಲಕೋಟೆ ನಿವಾಸಿ ಅಲ್ತಾಫ್ ಹುಸೈನ್ ಬಂಧಿತ ಪ್ರಮುಖ ಆರೋಪಿ.
ಘಟನೆಯ ವಿವರ: ಜೂನ್ 14 ರಂದು ನಗರದ ಸೂಟರ್ಪೇಟೆ ಗ್ರಾಮ ಲೆಕ್ಕಾಧಿಕಾರಿ ಕಚೇರಿ ಸಮೀಪ ಮಹಿಳೆಯೊಬ್ಬರ ಬಂಗಾರದ ಸರವನ್ನು ಕಸಿದುಕೊಂಡು ಬೈಕ್ನಲ್ಲಿ ಪರಾರಿಯಾಗಲಾಗಿತ್ತು. ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಜೂನ್ 26 ರಂದು ರೋಸಾರಿಯೋ ಶಾಲೆ ಸಮೀಪ ಪ್ರಕರಣಕ್ಕೆ ಸಂಬಂಧಿಸಿದ ಮೂವರನ್ನು ವಶಕ್ಕೆ ಪಡೆದುಕೊಂಡಿದ್ದರು. ಠಾಣೆಗೆ ಕರೆತರುವಾಗ ಪ್ರಮುಖ ಆರೋಪಿ ಅಲ್ತಾಫ್ ಹುಸೈನ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದನು. ಘಟನೆಗೆ ಸಂಬಂಧಿಸಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಇತರ ಆರೋಪಿಗಳಾದ ಉತ್ತರ ಪ್ರದೇಶದ ರವಿ ಬೌರಾ ಮತ್ತು ಮೊಹಮ್ಮದ್ ಸಾಹೀಲ್ ಎಂಬವರಿಂದ ಕಳವು ಮಾಡಿದ್ದ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ಅನ್ನು ಪೊಲೀಸರು ಈಗಾಗಲೇ ವಶಪಡಿಸಿಕೊಂಡಿದ್ದರು.
ಪರಾರಿಯಾಗಿದ್ದ ಅಲ್ತಾಫ್ ಪತ್ತೆಗೆ ವಿಶೇಷ ಪೊಲೀಸ್ ತಂಡ ರಚಿಸಲಾಗಿತ್ತು. ಪಾಂಡೇಶ್ವರ ದಕ್ಷಿಣ ಪೊಲೀಸ್ ಠಾಣೆಯ ಪಿಎಸ್ಐ ಮಾರುತಿ ಪಿ. ಹಾಗೂ ಸಿಬ್ಬಂದಿಗಳಾದ ಲಕ್ಷ್ಮಣ ಸಾಲೋಟಗಿ, ಸಾಗರ್ ಮತ್ತು ಆಂಜನೇಯ ಅವರಿದ್ದ ತಂಡವು ಖಚಿತ ಮಾಹಿತಿ ಆಧರಿಸಿ ಆಗಸ್ಟ್ 10 ರಂದು ವಿಜಯಪುರದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬೆನ್ನಟ್ಟಿ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಬಂಧಿತ ಆರೋಪಿ ಅಲ್ತಾಫ್ ಹುಸೈನ್ ವಿರುದ್ಧ ರಾಜ್ಯದ ವಿವಿಧ ಭಾಗಗಳಲ್ಲಿ 6 ಕಳವು ಪ್ರಕರಣಗಳು ದಾಖಲಾಗಿವೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.


