
ಉಡುಪಿ ; ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಪ್ರಮುಖ ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಮೇಲಿನ ಹೈಪ್ರೊಫೈಲ್ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೃತ್ಯಕ್ಕೆ ಹಣಕಾಸಿನ ನೆರವು ಹಾಗೂ ಹಣ ವರ್ಗಾವಣೆಗೆ ಸಹಕರಿಸಿದ್ದ ಮತ್ತಿಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಎರ್ಮಾಳು ತೆಂಕ ಪಂಚಾಯತ್ ಕಚೇರಿ ಸಮೀಪದ ನಿವಾಸಿಗಳಾದ ಚಿರಾಗ್ ಪೂಜಾರಿ (26) ಮತ್ತು ಮೊಹಮ್ಮದ್ ಇರ್ಷಾದ್ (43) ಬಂಧಿತ ಆರೋಪಿಗಳು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಮೂವರು ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದು ಸುದೀರ್ಘ ವಿಚಾರಣೆ ನಡೆಸಿದ್ದರು. ವಿಚಾರಣೆ ಹಾಗೂ ಸಾಕ್ಷ್ಯಾಧಾರಗಳ ತನಿಖೆಯ ವೇಳೆ, ಶೂಟೌಟ್ ಕೃತ್ಯ ಎಸಗಲು ಅಗತ್ಯವಿದ್ದ ಹಣಕಾಸಿನ ವ್ಯವಸ್ಥೆ ಹಾಗೂ ಆರೋಪಿಗಳಿಗೆ ಹಣ ವರ್ಗಾವಣೆ ಮಾಡುವಲ್ಲಿ ಚಿರಾಗ್ ಪೂಜಾರಿ ಮತ್ತು ಮೊಹಮ್ಮದ್ ಇರ್ಷಾದ್ ನೇರ ಪಾತ್ರ ವಹಿಸಿರುವುದು ದೃಢಪಟ್ಟಿತ್ತು.
ಪಕ್ಕಾ ಮಾಹಿತಿಯನ್ನಾಧರಿಸಿ ದಾಳಿ ನಡೆಸಿದ ಪೊಲೀಸರು, ಆಗಸ್ಟ್ 12ರಂದು ಇಬ್ಬರೂ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಂಧನದೊಂದಿಗೆ ಶೂಟೌಟ್ ಪ್ರಕರಣದಲ್ಲಿ ಬಂಧಿತರಾದವರ ಒಟ್ಟು ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ಕೃತ್ಯದ ಹಿಂದಿರುವ ಸಂಪೂರ್ಣ ಜಾಲವನ್ನು ಭೇದಿಸಲು ಕ್ರಮ ಕೈಗೊಂಡಿದ್ದಾರೆ.


