ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ಸಮಗ್ರ ಪ್ರವಾಸೋದ್ಯಮ ಅಭಿವೃದ್ಧಿಗೆ ಹೊಸ ನೀತಿ ತರಲು ರಾಜ್ಯ ಸರ್ಕಾರ ಮುಂದಾಗಿದೆ. ವಿಧಾನಸೌಧದಲ್ಲಿ ಜನಪ್ರತಿನಿಧಿಗಳೊಂದಿಗೆ ಸಮಾಲೋಚನಾ ಸಭೆಯನ್ನು ಪ್ರವಾಸೋದ್ಯಮ ಇಲಾಖೆ ಸಚಿವ ಕೆ.ಜೆ. ಜಾರ್ಜ್ ನಡೆಸಿದರು.
ಪ್ರವಾಸೋದ್ಯಮ ಹೂಡಿಕೆಗಳಿಗೆ ಸಿಂಗಲ್ ವಿಂಡೋ ವ್ಯವಸ್ಥೆ ಜಾರಿಗೆ ಸಭೆಯಲ್ಲಿ ಸಲಹೆ ವ್ಯಕ್ತವಾಗಿದ್ದು, ಸಿಆರ್ ಝೆಡ್, ಪರಿಸರ ಸೂಕ್ಷ್ಮ ವಲಯ ಹಾಗೂ ಅರಣ್ಯ ನಿಯಮಗಳಿಂದ ಉಂಟಾಗುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಒತ್ತು ನೀಡುವಂತೆಯೂ ಆಗ್ರಹ ಕೇಳಿಬಂದಿದೆ.
ಕರಾವಳಿ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಅಗತ್ಯ ಅನುಮತಿಗಳನ್ನು ಸರಳಗೊಳಿಸುವ ಕುರಿತು ಕೂಡಾ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಉಸ್ತುವಾರಿ ಸಚಿವರುಗಳಾದ ಯು.ಟಿ. ಖಾದರ್ ಹಾಗೂ ರಿಜ್ವಾನ್ ಅರ್ಷದ್ ಭಾಗಿಯಾಗಿದ್ದರು.
ಸೆಪ್ಟೆಂಬರ್ 7 ರೊಳಗೆ ಕರಡು ಪ್ರವಾಸೋದ್ಯಮ ನೀತಿಯನ್ನು ಸಿದ್ಧಪಡಿಸಲಾಗುವುದು ಎಂದು ಸಚಿವ ಕೆ.ಜೆ. ಜಾರ್ಜ್ ಸಭೆಯಲ್ಲಿ ಭರವಸೆ ನೀಡಿದ್ದಾರೆ. ಮುಂದಿನ ಹಂತದಲ್ಲಿ ಕರಡು ನೀತಿಯ ಕುರಿತು ಮತ್ತಷ್ಟು ಸಮಾಲೋಚನೆ ನಡೆಸಿ ಅಂತಿಮ ರೂಪ ನೀಡಲಾಗುವುದು, ಮಂಗಳೂರಿನಲ್ಲಿ ಶೀಘ್ರದಲ್ಲೇ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ಸಂದರ್ಭದಲ್ಲಿ ನೀತಿಗೆ ಸಂಬಂಧಿಸಿದ ಅಂತಿಮ ನಿರ್ಧಾರ ಕೈಗೊಳ್ಳುವ ಕುರಿತು ಪರಿಶೀಲಿಸಲಾಗುವುದು ಎಂದು ಸಚಿವ ಜಾರ್ಜ್ ತಿಳಿಸಿದ್ದಾರೆ.
ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ್, ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವಿ. ಸುನಿಲ್ ಕುಮಾರ್, ಮಂಜುನಾಥ ಭಂಡಾರಿ, ಐವನ್ ಡಿಸೋಜಾ, ಹರೀಶ್ ಪೂಂಜ, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ರಾಜೇಶ್ ನಾಯಕ್, ಭಾಗೀರಥಿ ಮುರುಳ್ಯ, ಅಶೋಕ್ ಕುಮಾರ್ ರೈ, ಗುರುರಾಜ್ ಗಂಟಿಹೊಳೆ, ಕಿರಣ್ ಕುಮಾರ್ ಕೊಡ್ಗಿ, ಯಶ್ಪಾಲ್ ಸುವರ್ಣ ಹಾಗೂ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದ್ದರು.


