ಉಡುಪಿ: ಪತ್ರಕರ್ತನ ಮೇಲೆ ಹೋಟೆಲ್ ನಲ್ಲಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರ ತಾಲೂಕು ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ನಾಗರಿಕ ಸೇವಾ ನಿಯಮಗಳ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದ್ದು, ಮಹೇಂದ್ರ ಕುಮಾರ್ ಶೆಟ್ಟಿ ಅವರ ಲೀನ್ ಅನ್ನು ಗದಗ ಜಿಲ್ಲೆಯ ಮುಂಡರಗಿ ತಾಲೂಕು ಆಸ್ಪತ್ರೆಗೆ ವರ್ಗಾಯಿಸಲಾಗಿದೆ.
ಪ್ರಸ್ತುತ ಕಾರ್ಕಳ ತಾಲೂಕು ಆಸ್ಪತ್ರೆಯಲ್ಲಿ ಒಒಡಿ ಮೇಲೆ ಕರ್ತವ್ಯದಲ್ಲಿದ್ದ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಆಗಸ್ಟ್ 4 ರಿಂದ ಸಪ್ಟೆಂಬರ್ 30 ರವರೆಗೆ ವೈದ್ಯಕೀಯ ಚಿಕಿತ್ಸೆಗಾಗಿ ರಜೆ ಪಡೆದಿದ್ದರು. ಕುಂದಾಪುರ ತಾಲೂಕು ಆಸ್ಪತ್ರೆಯಲ್ಲಿನ ಭ್ರಷ್ಟಾಚಾರ ಕುರಿತಂತೆ ವರದಿ ಮಾಡಿದ್ದ ಹಿನ್ನೆಲೆಯಲ್ಲಿ ಕನ್ನಡ ದಿನಪತ್ರಿಕೆ ವರದಿಗಾರನ ಮೇಲೆ ಹೋಟೆಲ್ ನಲ್ಲಿ ಇದ್ದ ವೇಳೆ ಹಲ್ಲೆ ನಡೆಸಿದ್ದರು.
ಘಟನೆ ಕುರಿತು ಪ್ರತಿಕ್ರಿಯಿಸಿದ್ದ ಆರೋಗ್ಯ ಸಚಿವ ಯು.ಟಿ. ಖಾದರ್ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಅದರ ಬೆನ್ನಲ್ಲೇ ಅಮಾನತುಗೊಳಿಸಿ ಆರೋಗ್ಯ ಇಲಾಖೆ ಆಯುಕ್ತ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.


