ಉಡುಪಿ: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಮಲ್ಪೆ ಬಂದರಿನಲ್ಲಿ ನಡೆದಿದೆ.
ಮೀನುಗಾರಿಕೆಗೆ ತೆರಳಿ ಆ.24 ರಂದು ರಾತ್ರಿ ಮಲ್ಪೆ ಬಂದರಿಗೆ ವಾಪಸ್ ಬಂದಿದ್ದ ಬೋಟ್ನ್ನು ಲಂಗರು ಹಾಕಲಾಗಿತ್ತು. ಬಳಿಕ ಬೋಟ್ನಲ್ಲಿದ್ದ ಕಾರ್ಮಿಕರು ಊಟ ಮುಗಿಸಿ ವಿಶ್ರಾಂತಿಗೆ ತೆರಳಿದ್ದರು. ಈ ವೇಳೆ ಮಧ್ಯರಾತ್ರಿ ಇಬ್ಬರು ಸ್ನೇಹಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದ್ದು, ಚಾಕುವಿನಿಂದ ಇರಿತಕ್ಕೊಳಗಾದ ಯುವಕ ಮೃತಪಟ್ಟಿದ್ದಾನೆ.ಮೃತನನ್ನು ಚಿಕ್ಕಮಗಳೂರು ಜಿಲ್ಲೆಯ ಅಭಿಷೇಕ್ (24) ಎಂದು ಗುರುತಿಸಲಾಗಿದೆ. ರಾಯಚೂರು ಜಿಲ್ಲೆಯ ಗೋವಿಂದರಾಜು (33) ಎಂಬಾತ ಚಾಕುವಿನಿಂದ ಇರಿದು ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ.

ಘಟನೆಯ ಮಾಹಿತಿ: ಆ.25ರಂದು ಮುಂಜಾನೆ ಮಲ್ಪೆ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಹಾಗೂ ಸಿಬ್ಬಂದಿಗೆ ಲಭ್ಯವಾಗಿದ್ದು, ತಕ್ಷಣ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಮಾಡಿದ ಬಳಿಕ ಬ್ಯಾಗ್ ಸಮೇತ ಹೊರ ರಾಜ್ಯಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿ ಗೋವಿಂದರಾಜುವನ್ನು ಆ.25 ರಂದು ಬೆಳಗ್ಗೆ ಮಲ್ಪೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಆರೋಪಿಯನ್ನು ವಿಚಾರಣೆ ನಡೆಸಲಾಗುತ್ತಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.


