ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯಾಗಿಸಿ, ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ 16 ವರ್ಷದ ಬಾಲಕಿಯನ್ನು ಕಳೆದ ವರ್ಷ ಸೆಪ್ಟೆಂಬರ್ನಿಂದ ನವೆಂಬರ್ ಅವಧಿಯಲ್ಲಿ ಆರೋಪಿ ಶ್ರೀಕಾಂತ್ (21) ಎಂಬಾತ ಬಲವಂತವಾಗಿ ಅತ್ಯಾಚಾರ ಮಾಡಿ ಯಾರಿಗೂ ಹೇಳದಂತೆ ಬೆದರಿಕೆ ಒಡ್ಡಿದ್ದರಿಂದ ಬಾಲಕಿ ಯಾರಿಗೂ ತಿಳಿಸದೆ ಸುಮ್ಮನಿದ್ದಳು. ಇದಾದ ಬಳಿಕ ಬಾಲಕಿ ಗರ್ಭಿಣಿಯಾಗಿದ್ದು,ಆ.22 ರಂದು ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆ.23ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಲು ಯತ್ನಿಸಿದ್ದು, ಬೆಂಗಳೂರಿನ ದೊಡ್ಡಬಳ್ಳಾಪುರದಿಂದ ತನ್ನ ಸ್ವಗ್ರಾಮವಾದ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಹಿಂದೂಪುರಕ್ಕೆ ಪರಾರಿಯಾಗಲು ಪ್ರಯತ್ನಿಸುತ್ತಿದ್ದ. ಆ.25 ರಂದು ಸಂಜೆ ವೇಳೆ ಪೊಲೀಸರು ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಸಿನಿಮಾ ಶೈಲಿಯಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿದ್ದಾರೆ.
ಆರೋಪಿ ಶ್ರೀಕಾಂತ್ ಮೂಲತಃ ಆಂಧ್ರಪ್ರದೇಶ ರಾಜ್ಯದ ಅನಂತಪುರ ಜಿಲ್ಲೆಯ ಹಿಂದೂಪುರ ನಿವಾಸಿಯಾಗಿದ್ದು, ಬೆಂಗಳೂರು ನಗರದ ಚೆನ್ನಸಂದ್ರದಲ್ಲಿ ಗೂಡ್ಸ್ ರಿಕ್ಷಾ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.ಬಂಧಿತ ಆರೋಪಿಯನ್ನು ಆ.26ರಂದು ಮಂಗಳೂರಿನ ಪೋಕ್ಸೋ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ. ಅವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ ಬಿ.ಎಸ್. ನೇತೃತ್ವದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಮರ್ಥ್ ಆರ್. ಗಾಣಿಗೇರ ತಂಡದ ಸಿಬ್ಬಂದಿಗಳಾದ ವೃಷಭ, ಮಹೇಶ್ ಮತ್ತು ಚರಣ್ರಾಜ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.


