ಉಡುಪಿ: ಕರಾವಳಿ, ಪ್ರಕೃತಿ ಹಾಗೂ ಜಲ ಪ್ರವಾಸೋದ್ಯಮದ ಸಾಮರ್ಥ್ಯವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು, ಧಾರ್ಮಿಕ ಪ್ರವಾಸೋದ್ಯಮದ ಜತೆಗೆ ಉಡುಪಿ ಜಿಲ್ಲೆಯ ಇತರೆ ಪ್ರವಾಸಿ ತಾಣಗಳನ್ನೂ ಅಭಿವೃದ್ಧಿಪಡಿಸುವಂತೆ ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ನಿರ್ದೇಶನದಂತೆ ಇಂದು ಅಧಿಕಾರಿಗಳ ತಂಡದೊಂದಿಗೆ ಉಡುಪಿ ಜಿಲ್ಲೆಯ ಪ್ರಮುಖ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿ ಹಾಗೂ ಮೂಲಸೌಕರ್ಯ ಕಾಮಗಾರಿಗಳನ್ನು ರಾಮ್ ಪ್ರಸಾತ್ ಮನೋಹರ್ ಪರಿಶೀಲಿಸಿದರು.
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಸೇರಿದಂತೆ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಆಗಮಿಸುವ ಭಕ್ತರು ಹಾಗೂ ಪ್ರವಾಸಿಗರನ್ನು ಜಿಲ್ಲೆಯ ಕರಾವಳಿ ಮತ್ತು ನೈಸರ್ಗಿಕ ತಾಣಗಳತ್ತ ಸೆಳೆಯುವ ರೀತಿಯಲ್ಲಿ ಯೋಜನೆ ರೂಪಿಸುವಂತೆ ಸೂಚಿಸಿದ ಕಾರ್ಯದರ್ಶಿ ರಾಮ್ ಪ್ರಸಾತ್ ಮನೋಹರ್,
ತ್ರಾಸಿ–ಮರವಂತೆ ಬೀಚ್ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಿ ಮುಂದಿನ 2–3 ತಿಂಗಳಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವಂತೆ ಸೂಚಿಸಿದರು.
ಸೋಮೇಶ್ವರ ಬೀಚ್ನಲ್ಲಿ ಪ್ರವಾಸಿಗರಿಗೆ ಅಗತ್ಯವಿರುವ ಪೂರಕ ಮೂಲಸೌಕರ್ಯ ಅಭಿವೃದ್ಧಿಪಡಿಸಿ, ತಾಣವನ್ನು ಮತ್ತಷ್ಟು ಆಕರ್ಷಕಗೊಳಿಸುವ ಕುರಿತು ಪರಿಶೀಲಿಸಿದ ಡಾ. ರಾಮ್ ಪ್ರಸಾತ್ ಮನೋಹರ್, ಕುಂದಾಪುರದ ಕೋಡಿ ಹಿನ್ನೀರು ಪ್ರದೇಶದಲ್ಲಿ ಪರಿಸರ ಸ್ನೇಹಿ ಹೌಸ್ಬೋಟ್ ಹಾಗೂ ಜಲ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಸಾಧ್ಯತೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.


