ಬೆಂಗಳೂರು: ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಪರಿಹಾರ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಅಗತ್ಯ ಸುಧಾರಣೆಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಚಿವ ಸಂಪುಟ ಉಪಸಮಿತಿಯನ್ನು ರಚಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಯು.ಟಿ. ಖಾದರ್ ಅವರನ್ನು ಉಪಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಗೃಹ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ್ ಮತ್ತು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸದಸ್ಯರಾಗಿದ್ದಾರೆ.
ಪರೀಕ್ಷೆ ಮತ್ತು ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳಿಗೆ ಕಡಿವಾಣ, ಪರೀಕ್ಷಾ ಮತ್ತು ನೇಮಕಾತಿಗೆ ನಿಗದಿತ ವೇಳಾಪಟ್ಟಿ ರೂಪಿಸುವುದು ಸೇರಿದಂತೆ ಹಲವು ಪ್ರಮುಖ ವಿಚಾರಗಳನ್ನು ಸಮಿತಿ ಪರಿಶೀಲಿಸಲಿದೆ.
ಇದರೊಂದಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ನಿಯಂತ್ರಣ, ಕೋಚಿಂಗ್ ಕೇಂದ್ರಗಳ ಮೇಲ್ವಿಚಾರಣೆ ಹಾಗೂ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳ ಮೇಲಿನ ಶಿಕ್ಷಣದ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ಕ್ರಮಗಳ ಬಗ್ಗೆಯೂ ಸಮಿತಿ ಶಿಫಾರಸುಗಳನ್ನು ನೀಡಲಿದೆ.
ಸರ್ಕಾರಿ ಶಾಲೆಗಳು, ಪಿಯು ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳ ಮೂಲಸೌಕರ್ಯ ಹಾಗೂ ಶಿಕ್ಷಣದ ಗುಣಮಟ್ಟ ಸುಧಾರಣೆ, ಶಿಕ್ಷಕರ ಕೊರತೆ ನಿವಾರಣೆ, ಪ್ರಯೋಗಾಲಯ, ಗ್ರಂಥಾಲಯ, ಹಾಸ್ಟೆಲ್ ಸೇರಿದಂತೆ ಅಗತ್ಯ ಸೌಲಭ್ಯಗಳ ಅಭಿವೃದ್ಧಿಯ ಬಗ್ಗೆಯೂ ಸಮಿತಿ ಅಧ್ಯಯನ ನಡೆಸಲಿದೆ.
ಈ ಎಲ್ಲಾ ವಿಷಯಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಕ್ಷೇತ್ರ ಎದುರಿಸುತ್ತಿರುವ ಸವಾಲುಗಳಿಗೆ ಸೂಕ್ತ ಪರಿಹಾರ ಮತ್ತು ಸುಧಾರಣಾ ಕ್ರಮಗಳ ಕುರಿತು ಸರ್ಕಾರಕ್ಕೆ ಉಪಸಮಿತಿ ಶಿಫಾರಸುಗಳನ್ನು ಸಲ್ಲಿಸಲಿದೆ.


