ಬೆಂಗಳೂರು: ಕರಾವಳಿ ಭಾಗದಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ, ಕರಾವಳಿ ಜಿಲ್ಲೆಗಳ ಸುದೀರ್ಘ ಬೇಡಿಕೆಗಳು ಹಾಗೂ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಮಗ್ರ ಮನವಿ ಸಲ್ಲಿಸಿದ್ದಾರೆ.
ಕರಾವಳಿ ಜಿಲ್ಲೆಗಳ ಆರ್ಥಿಕತೆ, ಮೀನುಗಾರಿಕೆ, ಪ್ರವಾಸೋದ್ಯಮ, ಉನ್ನತ ಶಿಕ್ಷಣ ಹಾಗೂ ಸಾಂಸ್ಕೃತಿಕ ಸಂರಕ್ಷಣೆಗೆ ಆದ್ಯತೆ ನೀಡುವಂತೆ ಮನವಿಯಲ್ಲಿ ಒತ್ತಾಯಿಸಿರುವ ಅವರು, ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ₹5,000 ಕೋಟಿ ಮೊತ್ತದ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸುವಂತೆ ಮನವಿ ಮಾಡಿದ್ದಾರೆ.
ಇದಕ್ಕೆ ಸ್ಪಂದಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಮನವಿಯ ಪ್ರಮುಖ ಅಂಶಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದರ ಜತೆಗೆ, ಅವುಗಳನ್ನು ಸಚಿವ ಸಂಪುಟದ ಅಜೆಂಡಾದಲ್ಲಿ ಸೇರಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.
ಮಂಗಳೂರಿನಲ್ಲಿ ಸೆ. 18ರಂದು ನಡೆಯಲಿರುವ ಸಚಿವ ಸಂಪುಟ ಸಭೆಯು ಕರಾವಳಿ ಭಾಗದ ನೈಜ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸೂಕ್ತ ವೇದಿಕೆಯಾಗಿದೆ ಎಂದು ಮಂಜುನಾಥ್ ಭಂಡಾರಿ ತಿಳಿಸಿದ್ದಾರೆ. ಯುವಜನರಿಗೆ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಸುಧಾರಿತ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ, ಕರಾವಳಿ ಸವೆತಕ್ಕೆ ಶಾಶ್ವತ ಪರಿಹಾರ ಹಾಗೂ ರೈತರು ಮತ್ತು ಮೀನುಗಾರರ ಆರ್ಥಿಕ ಸಬಲೀಕರಣಕ್ಕೆ ಪೂರಕ ಯೋಜನೆಗಳಿಗೆ ತಕ್ಷಣ ಆಡಳಿತಾತ್ಮಕ ಅನುಮೋದನೆ ಮತ್ತು ಅಗತ್ಯ ಅನುದಾನ ನೀಡುವಂತೆ ಅವರು ಒತ್ತಾಯಿಸಿದ್ದಾರೆ.
ಪ್ರಮುಖ ಬೇಡಿಕೆಗಳು:
• ಬ್ರಹ್ಮಾವರ ಕೃಷಿ ಡಿಪ್ಲೋಮಾ ಕಾಲೇಜು ಮೇಲ್ದರ್ಜೆಗೆ: ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿರುವ ಕೃಷಿ/ತೋಟಗಾರಿಕೆ ಡಿಪ್ಲೋಮಾ ಕಾಲೇಜನ್ನು ಮೇಲ್ದರ್ಜೆಗೇರಿಸಿ ಪದವಿ ಮಹಾವಿದ್ಯಾಲಯವಾಗಿ ಅಭಿವೃದ್ಧಿಪಡಿಸುವುದು. ಕ್ಯಾಂಪಸ್ನಲ್ಲಿರುವ 342 ಎಕರೆ ಭೂಮಿ ಹಾಗೂ ₹20 ಕೋಟಿ ಮೌಲ್ಯದ ಮೂಲಸೌಕರ್ಯವನ್ನು ಬಳಸಿಕೊಂಡು, ಹೆಚ್ಚುವರಿಯಾಗಿ ₹10 ಕೋಟಿ ಅನುದಾನ ಒದಗಿಸಿ, ಗುತ್ತಿಗೆ ಆಧಾರದ ಮೇಲೆ 10 ಬೋಧಕ ಸಿಬ್ಬಂದಿಯನ್ನು ನೇಮಿಸುವಂತೆ ಮನವಿ.
• ಡಿಪ್ಲೋಮಾ ಕೋರ್ಸ್ಗಳ ಸ್ಥಳಾಂತರ: ಬ್ರಹ್ಮಾವರ ಕ್ಯಾಂಪಸ್ನಲ್ಲಿ ಪ್ರಸ್ತುತ ನಡೆಯುತ್ತಿರುವ ಕೃಷಿ ಡಿಪ್ಲೋಮಾ ಕೋರ್ಸ್ಗಳನ್ನು ದಾವಣಗೆರೆ ಜಿಲ್ಲೆಯ ಕತ್ತಲಗೆರೆಯಲ್ಲಿರುವ ವಿಶ್ವವಿದ್ಯಾಲಯದ ಆವರಣಕ್ಕೆ ಸ್ಥಳಾಂತರಿಸಿ, ಎರಡೂ ಕ್ಯಾಂಪಸ್ಗಳ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು.
• ಕರಾವಳಿಗೆ ₹5,000 ಕೋಟಿ ವಿಶೇಷ ಪ್ಯಾಕೇಜ್: ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ₹5,000 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಿ, ಮೂಲಸೌಕರ್ಯ, ಮೀನುಗಾರಿಕೆ ಹಾಗೂ ಪ್ರವಾಸೋದ್ಯಮ ಕ್ಷೇತ್ರಗಳಿಗೆ ಆದ್ಯತೆ ನೀಡುವುದು.
• ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ: ಕರಾವಳಿ ತೀರದ ಸವೆತವನ್ನು ತಡೆಗಟ್ಟಲು ವೈಜ್ಞಾನಿಕ ಅಧ್ಯಯನದ ಆಧಾರದ ಮೇಲೆ ಶಾಶ್ವತ ತಡೆಗೋಡೆ ನಿರ್ಮಾಣ ಸೇರಿದಂತೆ ಅಗತ್ಯ ಸಂರಕ್ಷಣಾ ಕಾಮಗಾರಿಗಳನ್ನು ಕೈಗೊಳ್ಳುವುದು.


