ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಬಹುವರ್ಷಗಳ ಕನಸು ಕೊನೆಗೂ ನನಸಾಗಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸ್ವಂತ ಮನೆಯೊಂದನ್ನು ನಿರ್ಮಿಸಬೇಕೆಂಬ ಪತ್ನಿಯ ಆಸೆಯಂತೆ ಸಿದ್ದರಾಮಯ್ಯ ಅವರು ನಿರ್ಮಿಸಿರುವ ನೂತನ ನಿವಾಸದ ಗೃಹಪ್ರವೇಶವು ಗಣೇಶ ಚತುರ್ಥಿಯ ಶುಭ ದಿನದಂದು ಶಾಸ್ತ್ರೋಕ್ತವಾಗಿ ನೆರವೇರಿತು.
ಮೈಸೂರಿನ ಕುವೆಂಪುನಗರದ ವಿಶ್ವಮಾನವ ಜೋಡಿ ರಸ್ತೆಯಲ್ಲಿರುವ 80×120 ಅಳತೆಯ ನಿವೇಶನದಲ್ಲಿ ಈ ಭವ್ಯ ಬಂಗಲೆಯನ್ನು ನಿರ್ಮಿಸಲಾಗಿದೆ. ಮಂಗಳವಾರ ರಾತ್ರಿಯಿಂದಲೇ ನೂತನ ನಿವಾಸದಲ್ಲಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಆರಂಭಗೊಂಡಿದ್ದು, ಬುಧವಾರ ಮುಂಜಾನೆ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಸಿದ್ದರಾಮಯ್ಯ ಕುಟುಂಬವು ಹೊಸ ಮನೆಗೆ ಪ್ರವೇಶಿಸಿತು. ಯಾವುದೇ ಅಧಿಕೃತ ಪ್ರವಾಸ ಪಟ್ಟಿ ಇಲ್ಲದೆ ಮೈಸೂರಿಗೆ ಆಗಮಿಸಿದ್ದ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಕುಟುಂಬಸ್ಥರೊಂದಿಗೆ ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾಗಿದ್ದರು. ಕೇವಲ ಕುಟುಂಬದ ಸದಸ್ಯರು ಹಾಗೂ ಅತ್ಯಂತ ಆಪ್ತರ ಸಮ್ಮುಖದಲ್ಲಿ ಈ ಕಾರ್ಯಕ್ರಮ ಸರಳವಾಗಿ ನೆರವೇರಿತು.
ರಾಜ್ಯ ರಾಜಕಾರಣದಲ್ಲಿ ವಿರೋಧ ಪಕ್ಷದ ನಾಯಕರಾಗಿ ಹಾಗೂ ಮುಖ್ಯಮಂತ್ರಿಯಾಗಿ ಸುದೀರ್ಘ ಸೇವೆ ಸಲ್ಲಿಸಿದ್ದರೂ ಸಿದ್ದರಾಮಯ್ಯ ಅವರಿಗೆ ಮೈಸೂರಿನಲ್ಲಿ ಸ್ವಂತ ಮನೆಯಿರಲಿಲ್ಲ. ಸಾಂಸ್ಕೃತಿಕ ನಗರಿಗೆ ಆಗಮಿಸಿದಾಗಲೆಲ್ಲಾ ಅವರು ತಮ್ಮ ಆಪ್ತ ಸ್ನೇಹಿತ ಮರಿಸ್ವಾಮಿ ಅವರ ಮನೆಯಲ್ಲೇ ವಾಸ್ತವ್ಯ ಹೂಡುತ್ತಿದ್ದರು. ಇದೀಗ ಪತ್ನಿಯ ಇಷ್ಟದಂತೆ ಸ್ವಂತ ಮನೆ ನಿರ್ಮಾಣವಾಗಿದ್ದು, ಸಿದ್ದರಾಮಯ್ಯ ಕುಟುಂಬದಲ್ಲಿ ಹಬ್ಬದ ಸಂಭ್ರಮ ದುಪ್ಪಟ್ಟಾಗಿದೆ.


