ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ. 20 ಮತ್ತು 21ರಂದು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಕೆಲವೆಡೆ ಮಳೆಯಾಗಿದ್ದು, ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡ ಕವಿದ ವಾತಾವರಣ ಕಂಡುಬಂದಿದೆ. ಇನ್ನು ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಗಶಃ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. 2–3 ದಿನ ಇದೇ ರೀತಿಯ ಹವಾಮಾನ ಮುಂದುವರಿಯಲಿದ್ದು, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವುದು ಒಂದೆರಡು ದಿನ ತಡವಾಗುವ ಸಾಧ್ಯತೆಯಿದೆ.
ದಕ್ಷಿಣ ಬಂಗಾಳ ಕೊಲ್ಲಿಯಿಂದ ತಮಿಳುನಾಡು ಹಾಗೂ ದಕ್ಷಿಣ ಕರ್ನಾಟಕದವರೆಗೆ ವಾಯುಭಾರ ಕುಸಿತದ ಪ್ರಭಾವ ಮುಂದುವರಿದಿದ್ದು, ಇದರಿಂದ ದಕ್ಷಿಣ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಸೆ. 20–21ರ ವೇಳೆಗೆ ಮ್ಯಾನ್ಮಾರ್ ಸಮೀಪ ವಾಯುಭಾರ ಕುಸಿತ ಉಂಟಾಗಿ ಒಡಿಶಾ ಕಡೆಗೆ ಚಲಿಸುವ ಸಾಧ್ಯತೆಯಿದೆ. ಪಶ್ಚಿಮ ದಿಕ್ಕಿನಿಂದ ಮೋಡಗಳು ಕರಾವಳಿ ಭಾಗದತ್ತ ಬಂದರೆ ಮಾತ್ರ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.


