ಮಂಗಳೂರು: ಆಧುನಿಕ ತಂತ್ರಜ್ಞಾನ ಆಧಾರಿತ ಉತ್ಕೃಷ್ಟ ಬ್ಯಾಂಕಿಂಗ್ ಸೇವೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ಸಿಡಿಸಿಸಿ ಬ್ಯಾಂಕ್) ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ‘ಅತ್ಯುತ್ತಮ ಸಾಧನ ಪ್ರಶಸ್ತಿ’ಗೆ ಪಾತ್ರವಾಗಿದೆ.
ಬೆಂಗಳೂರಿನಲ್ಲಿ ನಡೆದ ಅಪೆಕ್ಸ್ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೋಟ್ಟು ಹಾಗೂ ಎಂ. ಮಹೇಶ್ ಹೆಗ್ಡೆ ಅವರು ಬ್ಯಾಂಕ್ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು. 2024-25ನೇ ಸಾಲಿನಲ್ಲಿ ಉತ್ತಮ ಕಾರ್ಯನಿರ್ವಹಣೆ ಹಾಗೂ ವ್ಯವಹಾರದ ಗುರಿಯನ್ನು ಸಾಧಿಸಿದ ಹಿನ್ನೆಲೆಯಲ್ಲಿ ವರ್ಗೀಕರಣ ‘II’ರಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ ಪ್ರಥಮ ಸ್ಥಾನ ಪಡೆದುಕೊಂಡಿದೆ.
113 ಶಾಖೆಗಳ ಮೂಲಕ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸೇವೆ ನೀಡುತ್ತಿರುವ ಬ್ಯಾಂಕ್ಗೆ ಇದು 24ನೇ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ. ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ಬ್ಯಾಂಕ್, ವರದಿ ವರ್ಷದಲ್ಲಿ ಅಟಲ್ ಪಿಂಚಣಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಐದು ಬಾರಿ ‘ಎಪಿವೈ ರಾಷ್ಟ್ರೀಯ ಪ್ರಶಸ್ತಿ’ ಪಡೆದಿದೆ. ಅಲ್ಲದೆ, ಕೃಷಿ ಸಾಲಗಳ ಶೇ.100 ಮರುಪಾವತಿ ಸಾಧನೆಯನ್ನು ಸತತ 31 ವರ್ಷಗಳಿಂದ ದಾಖಲಿಸಿದೆ.


