ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸದಾಶಿವನಗರ ಪೊಲೀಸರು ಭೇಟಿ ನೀಡಿದ್ದಾರೆ.
ನಿದ್ದೆ ಮಾತ್ರೆ ಸೇವಿಸಿ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದು, ರಾಮಯ್ಯ ಆಸ್ಪತ್ರೆಯ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎನ್. ಆರ್. ಸಂತೋಷ್ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಸಂತೋಷ್ ಅವರನ್ನು ಭೇಟಿ ಮಾಡಲು ಸಿಎಂ ಯಡಿಯೂರಪ್ಪ ರಾತ್ರಿಯೇ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಪ್ರತಿಕ್ರಿಯೆ ನೀಡಿದ ಸಿಎಂ, ನಿನ್ನೆ ಮದುವೆ ಮನೆಯಲ್ಲಿ ಚೆನ್ನಾಗಿದ್ದರು. ಯಾಕೆ ಏನು ಎನ್ನುವುದು ನನಗೂ ತಿಳಿದಿಲ್ಲ. ಈಗ ನಾನು ಅವರ ಕುಟುಂಬದ ಜೊತೆ ಮಾತನಾಡಲು ಹೋಗುತ್ತಿದ್ದೇನೆ ಎಂದು ತಿಳಿಸಿ ಆಸ್ಪತ್ರೆಯ ಒಳಗಡೆ ತೆರಳಿದರು.
ಶುಕ್ರವಾರ ಸಂಜೆ 7.30ರ ಸುಮಾರಿಗೆ ಡಾಲರ್ಸ್ ಕಾಲೋನಿಯ ಮನೆಯಲ್ಲಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮೊದಲ ಮಹಡಿಯಲ್ಲಿರುವ ಕೊಠಡಿಯಲ್ಲಿ ಅವರು ಪುಸ್ತಕ ಓದುತ್ತಿದ್ದರು. ಅಲ್ಲಿಯೇ ಆತ್ಮಹತ್ಯೆಗೆ ಪ್ರಯತ್ನ ನಡೆಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ಎನ್. ಆರ್. ಸಂತೋಷ್ ಹಲವು ವರ್ಷಗಳಿಂದ ಯಡಿಯೂರಪ್ಪ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. 2020ರ ಮೇ 28ರಂದು ಅವರನ್ನು ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು.