ಬೆಂಗಳೂರು ನಟ ರಕ್ಷಿತ್ ಶೆಟ್ಟಿ ಸಾಮಾಜಿಕ ಜಾಲತಾಣದ ಮೂಲಕ ಪಬ್ಲಿಕ್ ಟಿವಿ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ನನ್ನ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿ ಸುದ್ದಿ ಪ್ರಸಾರ ಮಾಡಿದೆ. ಇದಕ್ಕೆ ರಕ್ಷಿತ್ ಶೆಟ್ಟಿ ಬೇಸರ ಹೊರ ಹಾಕಿದ್ದಾರೆ. ಅಲ್ಲದೆ, ಪತ್ರ ಬರೆದು ಎಚ್ಚರಿಕೆ ನೀಡಿದ್ದಾರೆ.
‘ನನ್ನ ವೃತ್ತಿ ಜೀವನದಲ್ಲಿ ಯಾರೆಲ್ಲಾ ನನ್ನ ಜೊತೆ ಕೆಲಸ ಮಾಡಿದ್ದಾರೋ, ಅವರಲ್ಲಿ ಶೇಕಡ 90ರಷ್ಟು ಜನ ಇಂದಿಗೂ ನನ್ನ ಜೊತೆಯಲ್ಲೇ ಇದ್ದಾರೆ. ಬಿಟ್ಟು ಹೋದವರು ನನ್ನಿಂದ, ನನ್ನ ಕೆಲಸದಿಂದ ಏನಾದರೂ ಪಡೆದುಕೊಂಡು ಹೋಗಿದ್ದಾರೆಯೇ ಹೊರತು, ಯಾರೂ ಕಳೆದುಕೊಂಡು ಹೋಗಿಲ್ಲ. ಕಳೆದುಕೊಂಡವರಿಗೆ ಮುಂದೆ ಹೋಗಿ ಸಹಾಯ ಮಾಡಿದ್ದೀನಿ, ಅಥವಾ ಅವರಿಗೆ ಭುಜ ಕೊಟ್ಟು ನಿಂತಿದ್ದೀನಿ. ಇದಕ್ಕೆ ನನ್ನ ಜೊತೆ ಕೆಲಸ ಮಾಡಿದ ಪ್ರತಿಯೊಬ್ಬ ಲೈಟ್ ಆಫೀಸರ್ ಇಂದ ಹಿಡಿದು, ತಾಂತ್ರಿಕ ವರ್ಗ, ನಿರ್ದೇಶಕರು ಹಾಗೂ ಪ್ರತಿಯೊಬ್ಬ ನಿರ್ಮಾಪಕರು ಸಾಕ್ಷಿ. ನಾನು ಇದೆಲ್ಲದರ ಬಗ್ಗೆ ಎಲ್ಲೂ ಮಾತನಾಡಲು ಬಯಸುವುದಿಲ್ಲ. ನನಗೆ ಅದರ ಅಗತ್ಯವೂ ಇಲ್ಲ. ಹಾಗಂತ ನಿಜ ಸುಳ್ಳಾಗುವುದಿಲ್ಲ’ ಎಂದು ರಕ್ಷಿತ್ ಮಾತು ಆರಂಭಿಸಿದ್ದಾರೆ.
ಪಬ್ಲಿಕ್ ಕಳೆದ ಎರಡು ವರ್ಷಗಳಲ್ಲಿ ನನ್ನ ಬಗ್ಗೆ ಈ ರೀತಿಯ ಹಲವಾರು ಕಾರ್ಯಕ್ರಮಗಳನ್ನು ಮಾಡಿದ್ದಾರೆ. ನಾನು ಈ ಎಲ್ಲಾ ತೇಜೋವಧೆಯ ಪ್ರಯತ್ನಗಳನ್ನು ನಿರ್ಲಕ್ಷಿಸುತ್ತಾ ಬಂದಿದ್ದೆ. ಕಾರಣ ಇದಕ್ಕೆಲ್ಲ ನನ್ನ ಕೆಲಸ ಉತ್ತರ ಕೊಡುತ್ತದೆ ಎಂಬ ನಂಬಿಕೆ ಇತ್ತು. ಈಗ ಮತ್ತೊಮ್ಮೆ ಈ ಸುದ್ದಿ ವಾಹಿನಿಯು, ಮಾಧ್ಯಮದ ನೈತಿಕ ಜವಾಬ್ದಾರಿಗಳನ್ನು ಮರೆತು, ವೈಯುಕ್ತಿಕ ದಾಳಿ ನಡೆಸಿ, ನನ್ನ ವ್ಯಕ್ತಿತ್ವಕ್ಕೆ ಮತ್ತೆ ಮಸಿ ಬಳಿಯುವ ಕೀಳು ಮಟ್ಟದ ಕೆಲಸಕ್ಕೆ ಇಳಿದಿದ್ದಾರೆ’ ಎಂದು ರಕ್ಷಿತ್ ಬೇಸರ ಹೊರ ಹಾಕಿದ್ದಾರೆ.