ಉಡುಪಿ: ಸಿಎಂ ಬದಲಾವಣೆ ಬಗ್ಗೆ ಇಂದು ಹೈಕಮಾಂಡ್ ಸಂದೇಶ ವಿಚಾರದ ಬಗ್ಗೆ ಇವತ್ತಿನವರೆಗೆ ನನಗೆ ಯಾವುದೇ ಮಾಹಿತಿ ಬಂದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಉಡುಪಿಯಲ್ಲಿ ಇಂದು ಮಾತಾಡಿದ ಕಟೀಲ್, ನಾನು ಬಿಜೆಪಿಯ ರಾಜ್ಯಾಧ್ಯಕ್ಷ, ಇವತ್ತಿನವರೆಗೆ ನನಗೆ ಯಾವುದೇ ಮಾಹಿತಿ ಬಂದಿಲ್ಲ ನಾನು ಕೇವಲ ಮಾಧ್ಯಮಗಳಿಂದ ಈ ವಿಚಾರ ತಿಳಿದುಕೊಂಡಿದ್ದೇನೆ ಎಂದು ಹೇಳಿದ್ದಾರೆ. ಈ ಬಗ್ಗೆ ನನಗೆ ಹೇಳಲು ಏನೂ ಇಲ್ಲ ಎಂದಿರುವ ನಳೀನ್ ಕುಮಾರ್ ಕಟೀಲ್, ರಾಜ್ಯದ ಟ್ರ್ಯಾಕ್ಟರ್ ಈಗ ಯಡಿಯೂರಪ್ಪ ಬಿಡುತ್ತಿದ್ದಾರೆ ಎಂದಿದ್ದಾರೆ.
ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಿಸಲು ಎಲ್ಲಾ ಸಚಿವರು ತಮ್ಮ ಕ್ಷೇತ್ರದಲ್ಲಿ ಇರುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ, ಹಾಗಾಗಿ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ಆಯಾಯ ಜಿಲ್ಲೆಯಲ್ಲಿದ್ದು ನೆರೆ ಪರಿಹಾರದ ಕೆಲಸ ಮಾಡುತ್ತಿದ್ದಾರೆ, ಸಿಎಂ ಯಡಿಯೂರಪ್ಪ ಪ್ರವಾಸ ಮಾಡಿ ಸಾಂತ್ವನ ಹೇಳುತ್ತಿದ್ದಾರೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಇಂದು ಸಂಜೆಯೊಳಗೆ ಹೈಕಮಾಂಡ್ ನಿಂದ ಸಂದೇಶ ಬರಲಿದ್ದು ಬಳಿಕ ನಿರ್ಧಾರ ಮಾಡುವುದಾಗಿ ಇಂದು ಬೆಳಗ್ಗೆ ಬೆಳಗಾವಿಯಲ್ಲಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದರು.