Thursday, June 4, 2026
Homeಕರಾವಳಿಉಡುಪಿಕುಂದಾಪುರ: ಸೌದಿಯಲ್ಲಿ ಬಂಧಿಯಾಗಿದ್ದ ಹರೀಶ್ ಬಂಗೇರ ಆ.18ರಂದು ತವರಿಗೆ !

ಕುಂದಾಪುರ: ಸೌದಿಯಲ್ಲಿ ಬಂಧಿಯಾಗಿದ್ದ ಹರೀಶ್ ಬಂಗೇರ ಆ.18ರಂದು ತವರಿಗೆ !

- Advertisement -
- Advertisement -

ಕುಂದಾಪುರ:ಸೌದಿ ಅರೇಬಿಯಾ ಪೊಲೀಸರಿಂದ ಬಂಧನಕ್ಕೊಳಗಾದ ಕೋಟೇಶ್ವರ ಬೀಜಾಡಿ ಗ್ರಾಮದ ನಿವಾಸಿ ಹರೀಶ್‌ ಬಂಗೇರ ಎಸ್‌. ಆ. 18ರಂದು ತವರಿಗೆ ಆಗಮಿಸಲಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ತಾನು ಮಾಡದ ತಪ್ಪಿಗೆ ಸೌದಿ ಅರೇಬಿಯಾ ಪೊಲೀಸರಿಂದ ಬಂಧನಕ್ಕೊಳಪಟ್ಟು ಜೈಲಿನಲ್ಲಿರುವ ಕೋಟೇಶ್ವರ ಬೀಜಾಡಿ ಗ್ರಾಮದ ನಿವಾಸಿ ಹರೀಶ್‌ ಬಂಗೇರ ಎಸ್‌. ಅವರ ಬಿಡುಗಡೆ ಪ್ರಕ್ರಿಯೆ ಪೂರ್ಣಗೊಂಡಿದ್ದು ಆ. 18ರಂದು ಭಾರತಕ್ಕೆ ಮರಳಲಿದ್ದಾರೆ.

ಹರೀಶ್ ಬಂಗೇರ ತಾಯ್ನಾಡಿಗೆ ಮರಳಲು ಪೂರೈಸಬೇಕಾಗಿದ್ದ ವಿಧಿ- ವಿಧಾನಗಳೆಲ್ಲವೂ ಪೂರ್ಣಗೊಂಡಿದ್ದು ಆಗಸ್ಟ್ 17ರಂದು ಸೌದಿ ಅರೇಬಿಯಾದ ದಮಾಮ್ ವಿಮಾನ ನಿಲ್ದಾಣದಿಂದ ದೋಹಾಗೆ ಹೋಗಿ ದೋಹಾ ಮೂಲಕ ಆಗಸ್ಟ್ 18 ರಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ ಎಂದು ಸೌದಿ ಅರೇಬಿಯಾ ದ ರಿಯಾದ್ ನಲ್ಲಿರುವ ಭಾರತೀಯ ದೂತವಾಸದಿಂದ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಅಧಿಕೃತ ಮಾಹಿತಿ ಬಂದಿದೆ.

ಹರೀಶ್‌ ಬಂಗೇರ ಅವರ ಹೆಸರಲ್ಲಿ ನಕಲಿ ಖಾತೆ ತೆರೆದ ಪ್ರಕರಣ ಸಂಬಂಧ ಉಡುಪಿ ಸೆನ್‌ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ತನಿಖೆ ನಡೆಸಿದ ಉಡುಪಿ ಪೊಲೀಸರು ಆರೋಪಿಗಳಾದ ಮೂಡುಬಿದಿರೆಯ ಅಬ್ದುಲ್‌ ಹುಯೇಸ್‌ ಹಾಗೂ ತುವೇಸ್‌ ನನ್ನು ಬಂಧಿಸಿದ್ದರು. ಈ ಸಹೋದರರಿಬ್ಬರು ಹರೀಶ್‌ ಹೆಸರಲ್ಲಿ ನಕಲಿ ಖಾತೆ ತೆರೆದು ಸೌದಿ ದೊರೆ ಹಾಗೂ ಮೆಕ್ಕಾದ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿದ್ದು, ಅನಂತರ ಅದರ ಸ್ಕ್ರೀನ್‌ ಶಾಟ್‌ ತೆಗೆದು ಖಾತೆಯನ್ನು ಡಿಲೀಟ್‌ ಮಾಡಿದ್ದರು. ಇದು ಹರೀಶ್‌ ಅವರೇ ಹಾಕಿದ ಪೋಸ್ಟ್‌ ಎಂದು ತಿಳಿದು ಸೌದಿ ಪೊಲೀಸರು 2019ರ ಡಿಸೆಂಬರ್‌ನಲ್ಲಿ ಬಂಧಿಸಿದ್ದರು.

ಹರೀಶ್‌ ಬಂಗೇರ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದ ಸಂದೇಶ ರವಾನಿಸಿದ ನೈಜ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಆಗಿನ ಪೊಲೀಸ್‌ ವರಿಷ್ಠಾಧಿಕಾರಿ ನಿಶಾ ಜೇಮ್ಸ್‌ ಮತ್ತು ಹಾಲಿ ಪೊಲೀಸ್‌ ವರಿಷ್ಠಾಧಿಕಾರಿ ಎನ್‌. ವಿಷ್ಣುವರ್ಧನ ನೇತೃತ್ವದ ಪೊಲೀಸರ ಪಾತ್ರ ಪ್ರಮುಖವಾಗಿತ್ತು. ಪ್ರಸ್ತುತ ಆರೋಪಿಗಳು ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದಾರೆ.


- Advertisement -

Latest News

error: Content is protected !!